ಬೆಂಗಳೂರು: ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣದ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದ್ದಾರೆ.
ಸ್ಫೋಟದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಗೃಹ ಸಚಿವ ಕೆ.ಜೆ.ಜಾರ್ಜ್, ರಾಜ್ಯ ಗೃಹ ಇಲಾಖೆ ಸಲಹೆಗಾರ ಕೆಂಪಯ್ಯ, ಪೊಲೀಸ್ ಮಹಾ ನಿರ್ದೇಶಕ ಲಾಲ್ ರುಖುಮ್ ಪಾಚಾವೋ ಹಾಗೂ ನಗರ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದಾರೆ.
ಈ ವೇಳೆ ಪಚಾವೋ ಅವರು ಪ್ರಕರಣ ಕುರಿತ ಸಂಪೂರ್ಣ ವರದಿಯನ್ನು ಸಿಎಂಗೆ ಸಲ್ಲಿಸಿದರು. ಅಲ್ಲದೆ ಸ್ಫೋಟ ಪ್ರಕರಣದ ತನಿಖೆಗೆ ಕೇಂದ್ರದ ನೆರವು ಪಡೆಯುವ ಬಗ್ಗೆ ಮತ್ತು ತನಿಖೆಯ ನೇತೃತ್ವವನ್ನು ಯಾರಿಗೆ ವಹಿಸಬೇಕು ಎಂಬುದರ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ.
ತನಿಖೆ ಚುರುಕುಗೊಳಿಸಿದ ಪೊಲೀಸರು
ಇನ್ನು ಸ್ಫೋಟ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಹೋಟೆಲ್ಗಳು, ಚಿನ್ನದ ಮಳಿಗೆಗಳ ಹಾಗೂ ಕಾಫೀ ಶಾಪ್ನ ಹಲವು ಸಿಬ್ಬಂದಿಗಳನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.
ಮೃತ ಮಹಿಳೆಗೆ ಐದು ಲಕ್ಷ ಪರಿಹಾರ
ಚರ್ಚ್ ಸ್ಟ್ರೀಟ್ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ತಮಿಳುನಾಡು ಮೂಲದ ಭವಾನಿ ಅವರಿಗೆ ರಾಜ್ಯ ಸರ್ಕಾರ 5 ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ. ಅಲ್ಲದೆ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.