ಬೆಗುಸರಾಯಿ: ಬಿಹಾರ್ ಸಿಎಂ ನಿತೀಶ್ ಕುಮಾರ್ ಎನ್ಡಿಎ ಮೈತ್ರಿಕೂಟದಿಂದ ಹೊರಬಂದು ಬೆನ್ನಿಗೆ ಚೂರಿಹಾಕಿದ್ದಾರೆ. ಅಧಿಕಾರಕ್ಕಾಗಿ ಬೆನ್ನಿಗೆ ಚೂರಿಹಾಕುವುದು ಅವರ ಹವ್ಯಾಸವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ನಿತೀಶ್ ಕುಮಾರ್, ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಜಾರ್ಜ್ ಫರ್ನಾಂಡಿಸ್ ಅವರಿಗೂ ಕೂಡಾ ವಂಚಿಸಿದರು. ಇತ್ತೀಚೆಗೆ ಜಿತನ್ ರಾಮ್ ಮಾಂಜಿಯವರಿಗೂ ವಂಚಿಸಿದ್ದಾರೆ. ಜಾರ್ಜ್ ಫರ್ನಾಂಡಿಸ್ ಇವತ್ತು ಅಜ್ಞಾತವಾಸದಲ್ಲಿ ಬದುಕುವಂತೆ ಮಾಡಿದ್ದಾರೆ ಎಂದರು.
ಬಿಹಾರ್ ರಾಜ್ಯದಲ್ಲಿ ಜಂಗಲ್ ರಾಜ್ ಆಳ್ವಿಕೆ ಬಾರದಂತೆ ತಡೆಯಲು ಬಿಜೆಪಿ ಕಾರ್ಯಕರ್ತರ ಅಪಮಾನ ನಡೆದಾಗಲೂ ನಿತೀಶ್ ಕುಮಾರ್ ಅವರನ್ನು ಎನ್ಡಿಎ ಮೈತ್ರಿಕೂಟ ಬೆಂಬಲಿಸಿದ್ದಲ್ಲದೇ ಸಂಪೂರ್ಣ ಸಹಕಾರ ನೀಡಿತು. ಆದರೆ, ನಿತೀಶ್ ಎನ್ಡಿಎ ಮೈತ್ರಿಕೂಟಕ್ಕೆ ವಂಚಿಸಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇವಲ ಅಧಿಕಾರದ ದಾಹಕ್ಕಾಗಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಮೈತ್ರಿ ಮಾಡಿಕೊಂಡ ನಿತೀಶ್, ಅಧಿಕಾರಕ್ಕಾಗಿ ಯಾವ ಹಂತಕ್ಕೆ ಬೇಕಾದರೂ ಇಳಿಯಬಲ್ಲರು ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ನಿತೀಶ್ ವಂಚನೆಯ ಬಗ್ಗೆ ಬಿಜೆಪಿ ಕಾರ್ಯಕರ್ತರು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಕರೆ ನೀಡಿದರು.
ಕೇಂದ್ರ ಸರಕಾರ ಮೀಸಲಾತಿಯನ್ನು ರದ್ದುಗೊಳಿಸಲಿದೆ ಎಂದು ಹೇಳಿಕೆ ನೀಡಿದ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸುಳ್ಳಿನ ಸರದಾರರಾಗಿದ್ದಾರೆ. ಬಿಜೆಪಿ ಮೀಸಲಾತಿ ವಿರೋಧಿಯಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.