ಪಾಟ್ನಾ; ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಮೀಸಲಾತಿ ಹೇಳಿಕೆಯ ಬಗ್ಗೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರತಿಕ್ರಿಯೆ ನೀಡಲಿ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯ ಪರಿಷ್ಕರಣೆ ಮಾಡಲು ಬಯಸದಿದ್ದಲ್ಲಿ ಯಾಕೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಗುಡುಗಿದ್ದಾರೆ.
ಜನತಾ ಪರಿವಾರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ಸಮುದಾಯಗಳಿಗೆ ನೀಡುತ್ತಿರುವ ಮೀಸಲಾತಿಯನ್ನು ಪರಿಷ್ಕರಿಸುವುದು ಅಗತ್ಯವಾಗಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆದರೆ, ಅವರ ಹೇಳಿಕೆಯ ಬಗ್ಗೆ ಮೋದಿ ಮತ್ತು ಶಾ ಪ್ರತಿಕ್ರಿಯೆ ನೀಡಿರುವುದು ಹಲವು ಅನುಮಾನಗಳನ್ನು ಮೂಡಿಸಿದೆ ಎಂದರು.
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಬಿಜೆಪಿಗೆ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಂತೆ. ಪ್ರಧಾನಿ ಮೋದಿಗಾಗಲಿ ಅಥವಾ ಅಮಿತ್ ಶಾ ಅವರಿಗಾಗಲಿ ಭಾಗವತ್ ಹೇಳಿಕೆಯನ್ನು ವಿರೋಧಿಸುವ ಧೈರ್ಯವಿಲ್ಲ ಎಂದು ಲೇವಡಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಯು ಸಂಸದ ಪವನ್ ಕುಮಾರ್ ವರ್ಮಾ, ಆರ್ಜೆಡಿ ನಾಯಕ ಮನೋಜ್ ಝಾ ಮತ್ತು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಉಪಸ್ಥಿತರಿದ್ದರು.