ಬೆಂಗಳೂರು,ಅ.8- ಉತ್ತರ ಕರ್ನಾಟಕಕ್ಕೆ ದ್ರೋಹ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಭಿವೃದ್ಧಿಗಾಗಿ ಯಾರ್ಯಾಡರು ಅವರ ಅವಧಿಯಲ್ಲಿ ಎಷ್ಟೆಷ್ಟು ಹಣ ಬಿಡುಗಡೆ ಮಾಡಿದ್ದಾರೆ ಎಂಬ ಸಮಗ್ರ ಮಾಹಿತಿ ಒಳಗೊಂಡ ವರದಿ ನೀಡಲು ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ ನ ನ್ಯಾಯಾಧೀಶರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಯೋಗ ರಚನೆ ಮಾಡಲಿ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಿದ್ಧರಾಮಯ್ಯನವರು ಹಣಕಾಸು ಮಂತ್ರಿಯಾಗಿದ್ದರು.
ನಾನು ದ್ರೋಹ ಮಾಡಿದ್ದೇನೆ ಎಂದರೆ ಅವರು ದ್ರೋಹ ಮಾಡಿದ್ದಾರೆ ಎಂದಾಗುತ್ತದೆ. ಈ ಹಿನ್ನೆಲೆ ಯಲ್ಲಿ ಯಾರ್ಯಾಯರ ಅವಧಿಯಲ್ಲಿ ಎಷ್ಟೆಷ್ಟು ಹಣ ಬಿಡುಗಡೆಯಾಗಿ, ಯಾವಯಾವ ಯೋಜನೆಗಳು ಅನುಷ್ಠಾನಗೊಂಡಿವೆ ಎಂಬೆಲ್ಲ ಮಾಹಿತಿ ಸಂಗ್ರಹಿಸಿ ಜನರ ಮುಂದಿಡಬೇಕಿದೆ. ಈ ಹಿನ್ನೆಲೆಯಲ್ಲಿ ಆಯೋಗ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮ್ಯ ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಅವರ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕೀಳುಮಟ್ಟದಲ್ಲಿ ಮಾತನಾಡಿದ್ದಾರೆ. ಆ ರೀತಿ ನಾವು ಮಾತನಾಡುವುದಿಲ್ಲ. ನಂಜುಂಡಪ್ಪ ವರದಿ ಅನುಷ್ಠಾನದ ಕುರಿತಂತೆ ತನಿಖೆ ನಡೆದು ವಸ್ತು ಸ್ಥಿತಿಯನ್ನು ಜನರ ಮುಂದಿಡಬೇಕು. ಅಲ್ಲದೆ ಯಾವಯಾವ ಪ್ರದೇಶ ಹಿಂದುಳಿದಿದೆ, ಎಷ್ಟೆಷ್ಟು ಹಣವನ್ನು ಅಭಿವೃದ್ದಿಗಾಗಿ ನೀಡಲಾಗಿದೆ, ಶಿಕ್ಷಣ, ಆರೋಗ್ಯ, ನೀರಾವರಿ ಸೇರಿದಂತೆ ಇನ್ನಿತರ ಕ್ಷೇತ್ರಗಳ ಅಭಿವೃದ್ದಿಗೆ ವ್ಯಯಿಸಿರುವ ಹಣದ ಬಗ್ಗೆ ದಾಖಲೆ ಸಮೇತ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಇನ್ನೊಂದು ಸಮಿತಿ ರಚಿಸಿ ಕಾಲಮಿತಿಯಲ್ಲಿ ವರದಿ ನೀಡುವಂತೆ ಒತ್ತಾಯಿಸಿದರು.
ಇಂತಹ ರಾಜಕಾರಣವನ್ನು ಕೊನೆಗಾಣಿಸಬೇಕು ಎಂದ ಅವರು, ತಮ್ಮ ಬೇಳೆ ಬೇಯಿಸಿಕೊಳ್ಳಲು ರಾಜಕೀಯ ಮಾಡಬಾರದು ಎಂದರು. ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಡಿಸಿಪಿ ಹಾಗೂ ಎಸ್ಪಿಗಳನ್ನೇ ಹೊಣೆಗಾರರನ್ನಾಗಿ ಮಾಡಿದ್ದಾರೆ. ಆದರೆ ನಾವು ಮುಖ್ಯಮಂತ್ರಿಯಾಗಿದ್ದಾಗ ಎಸಿಪಿಗಳನ್ನೇ ಹೊಣೆಗಾರರೆಂದು ಹೇಳಿ ಅವರ ವಿರುದ್ದ ನೋಟೀಸ್ ನೀಡಲಾಗುತ್ತಿದ್ದು, ನಂತರ ಸಸ್ಪೆಂಡ್ಗೆ ಆದೇಶಿಸಲಾಗುತ್ತಿತ್ತು ಎಂದು ವಿವರಿಸಿದರು. ರಾಜ್ಯಕ್ಕೆ ಆಗಮಿಸಲಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಸರ್ಕಾರಕ್ಕೆ ಯಾವ ಸೂಚನೆ ಕೊಡುತ್ತಾರೆ ನೋಡಬೇಕಿದೆ. ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪ್ರಧಾನಿ ಪರಿಹಾರ ನೀಡಬೇಕು ಎಂದರು. ಇತ್ತೀಚೆಗೆ ನಡೆದ ನಾಸ್ಕಂನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಆಹ್ವಾನಿಸದಿರುವುದು ಕರ್ನಾಟಕಕ್ಕೆ ಮಾಡಿರುವ ಅನ್ಯಾಯ ಎಂದು ದೂರಿದರು.