ರಾಯಚೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡ, ದಲಿತರ ಪರವಾಗಿ ಕೆಲಸ ಮಾಡುತ್ತಿದ್ದು, ಜಿಪಂ, ತಾಪಂ ಚುನಾವಣೆಯಲ್ಲಿ ನಾವೇ ಗೆಲವು ಸಾಧಿಸುತ್ತೇವೆ ಎಂಬ ಭ್ರಮೆಯಲ್ಲಿ ಇಲ್ಲ, ಜನರ ಆಶೀರ್ವಾದವಿದೆ ಎಂಬ ವಿಶ್ವಾಸದಲ್ಲಿದ್ದೇವೆ. ಎರಡೂವರೆ ವರ್ಷದಲ್ಲಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದು, ಅದರಡಿ ಕೂಲಿ(ಮತ) ಕೇಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದೇವದುರ್ಗದ ಎಪಿಎಂಸಿ ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟಿಸಿ ಮಾತನಾಡಿದ ಅವರು, ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತಾರೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಬಿಜೆಪಿ ನಾಯಕ ಜಗದೀಶ ಶೆಟ್ಟರ್ ಹೇಳಿದ್ದಾರೆ. ಆದರೆ, ಜನರು ಕಾಂಗ್ರೆಸ್ಗೆ ಆಶೀರ್ವಾದ ಮಾಡಿದ್ದು ಆ ವಿಶ್ವಾಸ ನಮ್ಮಲ್ಲಿದೆ ಎಂದರು.
ಎಸ್ಸಿಪಿ ಮತ್ತು ಟಿಎಸ್ಪಿಗಳಂತಹ ನಿಯಮಗಳನ್ನು ಜಾರಿ ಮಾಡಿದ್ದು, ಎಸ್ಸಿ-ಎಸ್ಟಿ ಜನರಿಗೆ ಶೇ.24.1ರಷ್ಟು ಯೋಜನೆಯಲ್ಲಿ ಮೀಸಲು ಒದಗಿಸಲಾಗಿದೆ. ಹಣ ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದರು.
