
ಮಂಗಳೂರು : ಮೈಸೂರಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಖಂಡಿಸಿ ಹಾಗೂ ಕೊಲೆ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಆಗ್ರಹಿಸಿ ವಿಶ್ವಹಿಂದು ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಮಂಗಳವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರನ್ನುದ್ದೇಶಿಸಿ ಬಜರಂಗದಳ ರಾಜ್ಯ ಸಂಚಾಲಕ ಶರಣ್ ಪಂಪ್ವೆಲ್ ಅವರು ಮಾತನಾಡಿ, ರಾಜ್ಯದಲ್ಲಿ ಹಿಂದೂಗಳಿಗೆ ಬದುಕಲು ಅವಕಾಶವಿಲ್ಲದಂತಾಗಿದೆ. ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಿ ಬಹುಸಂಖ್ಯಾತರ ವಿರೋಧಿ ಧೋರಣೆ ಹೊಂದಿರುವುದು ಇದಕ್ಕೆ ಕಾರಣ ಎಂದು ಆರೋಪಿಸಿದರು.

ಮೈಸೂರಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ರಾಜು ಕುಟುಂಬಕ್ಕೆ ರಾಜ್ಯ ಸರಕಾರವು 25 ಲಕ್ಷ ಪರಿಹಾರವನ್ನು ನೀಡಬೇಕು ಮತ್ತು ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸ ಬೇಕು ಎಂದು ಶರಣ್ ಪಂಪ್ವೆಲ್ ಒತ್ತಾಯಿಸಿದರು.
ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಕ್ಯಾ. ಗಣೇಶ್ ಕಾರ್ಣಿಕ್, ವಿ.ಹಿಂ.ಪ. ಮುಖಂಡ ಜಗದೀಶ್ ಶೇಣವ, ಗೋಪಾಲ್ ಕುತ್ತಾರ್, ಬಜರಂಗದಳ ಮುಖಂಡ ಪ್ರವೀಣ್ ಕುತ್ತಾರ್, ಶಿವಾನಂದ್ ಮೆಂಡನ್, ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ಮೋನಪ್ಪ ಭಂಡಾರಿ ಮೊದಲಾದವರು ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದರು.