ತುಮಕೂರು, ಏ.10- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಧುಗಿರಿ ತಾಲೂಕಿನ ಪುರವರ ಹೋಬಳಿಯ ಯರ್ರಪ್ಪನಪಾಳ್ಯದ ನಿವಾಸಿ ರಾಧಮ್ಮ (26) ಮೃತಪಟ್ಟ ಮಹಿಳೆ. ಕಳೆದ ಐದು ವರ್ಷಗಳ ಹಿಂದೆ ನಾರಾಯಣಪ್ಪ ಎಂಬುವನು ರಾಧಮ್ಮನನ್ನು ವಿವಾಹವಾಗಿದ್ದ. ಕೌಟುಂಬಿಕವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ನಿನ್ನೆ ಸಂಜೆಯೂ ಸಹ ಇಬ್ಬರ ನಡುವೆ ಜಗಳ ನಡೆದಿದ್ದು, ಇದರಿಂದ ಕುಪಿತಗೊಂಡ ನಾರಾಯಣಪ್ಪ ರಾಧಮ್ಮನ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದ ಎಂದು ತಿಳಿದುಬಂದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ರಾಧಮ್ಮನನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾಧಮ್ಮ ಮೃತಪಟ್ಟಿದ್ದಾರೆ. ಈ ಸಂಬಂದ ಕೊಡಿಗೇಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.