ಮೈಸೂರು: ರಾಜ್ಯದ ಜನತೆ ಇಬ್ಬರು ಡಿವೈಎಸ್ಪಿಗಳ ಆತ್ಮಹತ್ಯೆ ಬಗ್ಗೆ ತಮ್ಮ ಗಮನ ಕೇಂದ್ರೀಕರಿಸಿದ್ದರೇ, ರಾಜ್ಯ ಸರ್ಕಾರ ಸದ್ದಿಲ್ಲದೇ ಕೆಆರ್ ಎಸ್ ಮತ್ತು ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದೆ.
ಒಪ್ಪಂದದಂತೆ 10,600 ಕ್ಯೂಸೆಕ್ಸ್ ನೀರನ್ನು ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಟ್ಟಿದ್ದು, ಕಳೆದ ವರ್ಷ ಮಳೆಯ ಕೊರತೆಯಿಂದಾಗಿ ಎರಡು ತಿಂಗಳಿಂದ ಜಲಾಶಯದ ನೀರಿನ ಮಟ್ಟ ತಳ ತಲುಪಿದೆ.
ಕಾವೇರಿ ನೀರು ಹಂಚಿಕೆ ನ್ಯಾಯಾಧೀಕರಣದ ತೀರ್ಪಿನಂತೆ ಕರ್ನಾಟಕ 34 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕಾಗಿದೆ. ಆದರೆ ತಮಿಳುನಾಡು ಸರ್ಕಾರ ಕರ್ನಾಟಕ ಉಳಿದ 7.5 ಟಿಎಂಸಿ ನೀರು ಬಿಡುಗಡೆ ಮಾಡಿಲ್ಲವೆಂದು, ಬಾಕಿ ಉಳಿದ ನೀರು ಬಿಡುಗಡೆಗೊಳಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಆದರೆ ಉಳಿದ 7.5 ಟಿಎಂಸಿ ಅಡಿ ನೀರನ್ನು ತಮಿಳುನಾಡಿಗೆ ಬಿಟ್ಟರೇ ಮೈಸೂರು ಮತ್ತು ಬೆಂಗಳೂರು ನಗರಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಸಾಧ್ಯವಿಲ್ಲ.
ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ರೈತರು ಸಂಕಷ್ಟ ಎದುರಿಸುವ ಸ್ಥಿತಿ ಎದುರಾಗಿದೆ. ಕೆಆರ್ಎಸ್ ನಲ್ಲಿ ಕೇವಲ 95 ಅಡಿ ಮಾತರ ನೀರಿದೆ. ಇನ್ನೂ ಚಿಕ್ಕದೇವರಾಜ , ವಿರಿಜಾ ಕಾಲುವೆ ಪ್ರದೇಶದ ರೈತರಿಗೆ ಕಾಲುವೆಗಳ ಆಧುನೀಕರಣದ ಹೆಸರಲ್ಲಿ ಕಳೆದ ಎರಡು ವರ್ಷಗಳಿಂದ ನೀರು ಬಿಡದ ಹಿನ್ನೆಲೆಯಲ್ಲಿ ಈ ಭಾಗ ರೈತರು ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ರಾಜ್ಯದ ರೈತರಿಗೆ ನೀರಿನ ಅಭಾವ ತಲೆದೋರಿದೆ, ಆದರೆ ಕರ್ನಾಟಕ ಸರ್ಕಾರ ತಮಿಳುನಾಡು ರಾಜ್ಯದ ಹಿತ ಕಾಯಲು ಹೊರಟಿರುವುದು ಎಷ್ಟು ಸರಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಪ್ರಶ್ನಿಸಿದೆ.

Comments are closed.