
ಮಂಗಳೂರು, ಸೆ.16: ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸರಕಾರದ ನೇತೃತ್ವದಲ್ಲಿ ಪ್ರಥಮವಾಗಿ ಹಮ್ಮಿಕೊಳ್ಳಲಾದ 162ನೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ ಶುಕ್ರವಾರ ನಗರದ ಗೋಕರ್ಣನಾಥ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದರು. ಬಳಿಕ ಶ್ರೀ ನಾರಾಯಣಗುರುಗಳ ಬಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಾಮಾಜಿಕ ಬದಲಾವಣೆಯಲ್ಲಿ ನಾರಾಯಣಗುರುಗಳು ನಿರ್ವಹಿಸಿದ ಪಾತ್ರ ಪ್ರಮುಖವಾದುದು. ಶಿಕ್ಷಣಕ್ಕೆ ಮಹತ್ವ ನೀಡಿದ್ದ ಅವರು, ಸಮಾಜದಲ್ಲಿ ಅಸ್ಪಶ್ಯತೆ ನಿವಾರಣೆಗಾಗಿ ವಿಶೇಷ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ಅವರ ಸೈದ್ಧಾಂತಿಕ ವಿಚಾರಗಳ ಬಗ್ಗೆ ತಾನು ಅತ್ಯಧಿಕ ಅಭಿಮಾನ ಹೊಂದಿರುವುದಾಗಿ ಹೇಳಿದ ಅವರು, ಈ ಕಾರ್ಯಕ್ರಮ ಭಾವನಾತ್ಮಕವಾಗಿ ತನಗೆ ಸಂಸತ ನೀಡಿದೆ ಎಂದರು.
ಇದೀಗ ಮುಖ್ಯಮಂತ್ರಿಯವರು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಸರಕಾರದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆಗೆ ಆದೇಶ ನೀಡಿದ್ದಾರೆ. ಬಂಟ್ವಾಳ ತಾಲೂಕಿನ ಸಜಿಪಮೂಡಾದ ನಾರಾಯಣಗುರು ಜ್ಡಾನ ಮಂದಿರದ ರುವಾರಿ ಸಂಜೀವ ಪೂಜಾರಿ ಅವರ ಬೇಡಿಕೆಯ ಮೇರೆಗೆ ಮುಖ್ಯಮಂತ್ರಿ ಈ ಸರಕಾರಿ ಆದೇಶಕ್ಕೆ ಮುಂದಾಗಿದ್ದಾರೆ ಎಂದು ಸಚಿವ ರೈ ಆದೇಶ ಪ್ರತಿಯನ್ನು ಸಭೆಯಲ್ಲಿ ಓದಿ ಹೇಳಿದರು.

ಪ್ರೊ. ಎಂ.ಎಸ್. ಕೋಟ್ಯಾನ್ ಕೂಡಾ ನಾರಾಯಣಗುರುಗಳ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭ ಮುದ್ದು ಮೂಡುಬೆಳ್ಳೆ ನಿರ್ದೇಶನದಲ್ಲಿ ತಯಾರಿಸಲಾದ ನಾರಾಯಣಗುರುಗಳ ಜೀವನ ಸಾಧನೆ ಹಾಗೂ ಸಂದೇಶಗಳನ್ನು ಒಳಗೊಂಡ ಧ್ವನಿ ಸುರುಳಿಯನ್ನು ಬಿಡುಗಡೆಗೊಳಿಸಲಾಯಿತು.
ಶಾಸಕ ಜೆ.ಆರ್.ಲೋಬೊ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಾಸಕ ಬಿ.ಎ. ಮೊಯ್ದೀನ್ ಬಾವ, ಮೇಯರ್ ಹರಿನಾಥ್, ತಾ.ಪಂ. ಅಧ್ಯಕ್ಷ ಮುಹಮ್ಮದ್ ಮೋನು, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ,ಹಿರಿಯ ಜನಪದ ವಿದ್ವಾಂಸ ಡಾ. ಗಣೇಶ್ ಅಮೀನ್ ಸಂಕಮಾರ್, ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್, ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ. ವೇದಮೂರ್ತಿ, ಮನಪಾ ಆಯುಕ್ತ ಮುಹಮ್ಮದ್ ನಝೀರ್, ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಉಪಸ್ಥಿತರಿದ್ದರು. ಕೋಶಾಧಿಕಾರಿ ಪದ್ಮರಾಜ್ ಸ್ವಾಗತಿಸಿದರು. ಮಂಜುಳಾ ಕಾರ್ಯಕ್ರಮ ನಿರೂಪಿಸಿದರು.
Comments are closed.