ಮಂಗಳೂರು: ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮದಲ್ಲಿ ಮೊಬೈಲ್ ಮೂಲಕ ಮಹಿಳೆಯ ಅರೆನಗ್ನ ಚಿತ್ರ ವೀಕ್ಷಿಸಿದ ಶಿಕ್ಷಣ ಸಚಿವ ತನ್ವಿರ್ ಸೇಠ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ರಾಜ್ಯ ಸಹ ವಕ್ತಾರೆ ಸುಲೋಚನಾ ಜಿ.ಕೆ.ಭಟ್ ಆಗ್ರಹಿಸಿದ್ದಾರೆ.
ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೈತಿಕ ಮೌಲ್ಯವನ್ನು ಎತ್ತಿ ಹಿಡಿಯಬೇಕಾದ ಶಿಕ್ಷಣ ಸಚಿವರು ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮದಲ್ಲಿ ಯುವತಿಯೋರ್ವಳ ಅರೆನಗ್ನ ಚಿತ್ರ ವೀಕ್ಷಿಸುವ ಮೂಲಕ ಸಮಾಜವೇ ತಲೆತಗ್ಗಿಸುವ ಕೆಲಸ ಮಾಡಿದ್ದಾರೆ. ಅವರು ತಕ್ಷಣ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡದಿದ್ದರೆ ಮುಖ್ಯಮಂತ್ರಿಯವರೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಅವರು ಹೇಳಿದ್ದಾರೆ
ಅರೆನಗ್ನ ಚಿತ್ರಗಳ ವೀಕ್ಷಣೆಯಲ್ಲಿ ಮಗ್ನವಾಗಿದ್ದ ಸೇಠ್ ಅವರು ಪರೋಕ್ಷವಾಗಿ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಸಮಾಜಕ್ಕೆ, ವಿದ್ಯಾರ್ಥಿ ಸಮೂಹಕ್ಕೆ ಮಾದರಿಯಾಗಬೇಕಿದ್ದ ಶಿಕ್ಷಣ ಸಚಿವರು, ತಮ್ಮ ವಿಕೃತ ಮನಸ್ಸಿನ ಮೂಲಕ ಅಗೌರವ ತರುವ ಕೆಲಸ ಮಾಡಿದ್ದಾರೆ. ಅವರು ಶಿಕ್ಷಣ ಸಚಿವರಾಗಿ ಮುಂದುವರಿಯುವುದರಲ್ಲಿ ಅರ್ಥವಿಲ್ಲ. ತಕ್ಷಣ ಅವರು ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಬಿಜೆಪಿ ತೀವ್ರ ಹೋರಾಟ ಕೈಗೊಳ್ಳಲಿದೆ ಎಂದು ಎಚ್ಚರಿಸಿದರು.
Comments are closed.