
ನವದೆಹಲಿ: ರಾಜಧಾನಿ ದೆಹಲಿಯ ಉತ್ತರ ಭಾಗದಲ್ಲಿರುವ ಭವನಾ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 17 ಮಂದಿ ಸಾವನ್ನಪ್ಪಿ ಇಬ್ಬರಿಗೆ ಗಾಯವಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಎರಡು ಮಹಡಿಯ ಕಾರ್ಖಾನೆಯಲ್ಲಿ ಪಟಾಕಿಗಳನ್ನು ಇರಿಸಲಾಗಿತ್ತು. ನಿನ್ನೆ ರಾತ್ರಿ ಕಟ್ಟಡಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಕಟ್ಟಡದ ಸುತ್ತಲೂ ಬೆಂಕಿ ಆವರಿಸಿಕೊಂಡ ಪರಿಣಾಮ ಕಟ್ಟಡದಲ್ಲಿದ್ದ 10 ಮಂದಿ ಮಹಿಳೆಯರು, 7 ಮಂದಿ ಪುರುಷಕರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಅಧಿಕಾರಿಗಳು ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದರು. ಘಟನೆಯಲ್ಲಿ 17 ಮಂದಿ ಸಾವನ್ನಪ್ಪಿದ್ದು, ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ತನಿಕೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ನಿನ್ನೆ ಸಂಜೆ 6.30ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿರುವ ಬಗ್ಗೆ ಕರೆ ಬಂದಿತ್ತು. ಕೂಡಲೇ 10 ಅಗ್ನಿಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕೆ ಹೋಗಲಾಯಿತು. ಪ್ರಸ್ತುತ ಪರಿಸ್ಥಿತಿ ನಿಯಯಂತ್ರಣಕ್ಕೆ ಬಂದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.
ನೆಲ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ ನಂತರ ಬೆಂಕಿಯ ಕೆನ್ನಾಲಿಗೆ ಮೊದಲು ಹಾಗೂ ಎರಡನೇ ಮಹಡಿಗೂ ಹೊತ್ತಿಕೊಂಡಿದೆ. ಕಾರ್ಯಾಚರಣೆ ವೇಳೆ ನೆಲಮಹಡಿಯಲ್ಲಿ 4 ಮೃತದೇಹ, ಮೊದಲನೇ ಮಹಡಿಯಲ್ಲಿ 13 ಮೃತದೇಹಗಳನ್ನು ಹೊರಗೆ ತೆಗೆಯಲಾಯಿತು. ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ವ್ಯಕ್ತಿಯೋರ್ವ ಮಹಡಿಯಿಂದ ಕಳೆಗ ಹಾರಿದ್ದು, ವ್ಯಕ್ತಿಗೆ ಮೂಳೆ ಮುರಿದಿದೆ ಎಂದು ಅಗ್ನಿಶಾಮಕ ದಳದ ನಿರ್ದೇಶಕ ಜಿ.ಸಿ. ಮಿಶ್ರಾ ಅವರು ಹೇಳಿದ್ದಾರೆ.
Comments are closed.