
ಮಂಗಳೂರು, ಆಗಸ್ಟ್.30: ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ನಲ್ಲಿ ಗುರುವಾರ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ನಲ್ಲಿ ವಿದ್ಯಾರ್ಥಿನಿಯರಿಗೆ ಅಪರಿಚಿತ ವ್ಯಕ್ತಿಯೋರ್ವ ಅಶ್ಲೀಲವಾಗಿ ವರ್ತಿಸಿ ಕಿರುಕುಳ ನೀಡಲು ಯತ್ನಿಸಿದ ಘಟನೆ ಬುಧವಾರ ಸಂಜೆ ನಡೆದಿದ್ದು, ಈ ಬಗ್ಗೆ ವಿದ್ಯಾರ್ಥಿಯನಿಯರು ಕೂಡಲೇ ವಿವಿ ಆಡಳಿತ ಮಂಡಳಿಗೆ ದೂರು ನೀಡಿದ್ದರೂ… ಆಡಳಿತ ಮಂಡಳಿ ಇದುವರೆಗೆ ಈ ಬಗ್ಗೆ ಯಾವೂದೇ ಕ್ರಮಕ್ಕೆ ಮುಂದಾಗದಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ಘಟನೆ ವಿವರ : ಬುಧವಾರ ಸಂಜೆ ವಿವಿ ಕ್ಯಾಂಪಸ್ನಲ್ಲಿ ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಅಶ್ಲೀಲವಾಗಿ ವರ್ತಿಸಿ ಕಿರುಕುಳ ನೀಡಲು ಯತ್ನಿಸಿದ್ದಾನೆ. ಈ ಬಗ್ಗೆ ವಿದ್ಯಾರ್ಥಿಯನಿಯರು ಕೂಡಲೇ ವಿವಿ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಆದರೆ ಕೃತ್ಯವನ್ನು ವಿವಿ ಆಡಳಿತ ಗಂಭೀರವಾಗಿ ಪರಿಗಣಿಸಿಲ್ಲ. ಘಟನೆ ನಡೆದು ಒಂದು ದಿನ ಕಳೆದರೂ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.
ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ತರಗತಿ ಬಹಿಷ್ಕರಿಸಿ ನೂರಾರು ಸಂಖ್ಯೆಯಲ್ಲಿ ಆಡಳಿತ ಕಚೇರಿಯೆದುರು ಜಮಾಯಿಸಿದ ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿ ಅದರ ಆಧಾರದಲ್ಲಿ ಆರೋಪಿಯ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಈ ವೇಳೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಪ್ರತಿಭಟನ ಸ್ಥಳಕ್ಕೆ ವಿವಿ ಅಧಿಕಾರಿಗಳು ಆಗಮಿಸಿ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಆದರೆ ಇದಕ್ಕೊಪ್ಪದ ವಿದ್ಯಾರ್ಥಿಗಳು ಸ್ಥಳಕ್ಕೆ ಕುಲಪತಿ ಆಗಮಿಸಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆಯನ್ನು ಮುಂದುವರಿಸಿದರು. ಬಳಿಕ ಪೊಲೀಸರು ಮಧ್ಯೆ ಪ್ರವೇಶಿಸಿ ಆರೋಪಿಯನ್ನು ಪತ್ತೆ ಹಚ್ಚುವ ಭರವಸೆ ನೀಡಿದ್ದಾರೆ.
Comments are closed.