
ಕೋಲ್ಕೊತಾ: ತೃಣಮೂಲ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ ಸೆಪ್ಟೆಂಬರ್ 28ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಕೋಲ್ಕೊತಾ ಸಿಟಿ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ಕೋಲ್ಕೊತಾದಲ್ಲಿ ಆಗಸ್ಟ್ 11ರಂದು ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಅಮಿತ್ ಶಾ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬ್ಯಾನರ್ಜಿ ಅವರು ಮೆಟ್ರೋಪಾಲಿಟನ್ ಮ್ಯಾಜಿಸ್ಪ್ರೇಟ್ ಎದುರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ತೃಣಮೂಲ ಕಾಂಗ್ರೆಸ್ ಸಂಸದರಾಗಿರುವ ಬ್ಯಾನರ್ಜಿ, ಇಬ್ಬರು ಸಾಕ್ಷಿಗಳಾದ ಸ್ವರೂಪ್ ಬಿಸ್ವಾಸ್ ಮತ್ತು ಸೌಮ್ಯ ಬಕ್ಷಿ ಅವರೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿ ಲಿಖಿತ ಹೇಳಿಕೆಗಳನ್ನು ಬುಧವಾರ ಸಲ್ಲಿಸಿದರು.
ಹೇಳಿಕೆಗಳಿಗೆ ಸಂಬಂಧಿಸಿದಂತೆ ಕ್ಷಮಾಪಣೆ ಕೋರುವಂತೆ ಆಗ್ರಹಿಸಿ ಆಗಸ್ಟ್ 13ರಂದು ಶಾ ಅವರಿಗೆ ಬ್ಯಾನರ್ಜಿ ನೋಟಿಸ್ ಸಹ ನೀಡಿದ್ದರು.
Comments are closed.