ಕರ್ನಾಟಕ

20 ಶಾಸಕರಿಂದ ಸ್ವಯಂ ಪ್ರೇರಿತವಾಗಿ ರಾಜೀನಾಮೆ ಸಾಧ್ಯತೆ?

Pinterest LinkedIn Tumblr


ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟದ ದಿನಗಳು ಎದುರಾಗಿರುವ ಸಂದರ್ಭದಲ್ಲಿಯೇ ಸೋಮವಾರದಿಂದಲೇ ಸಮ್ಮಿಶ್ರ ಸರ್ಕಾರದ ಪತನಕ್ಕೆ ಚಟುವಟಿಕೆಗಳು ಆರಂಭವಾಗಲಿದೆ ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಬಲವಾಗಿ ಕೇಳಿ ಬರುತ್ತಿವೆ.

ಆಪರೇಷನ್‌ ಕಮಲದ ಬಗ್ಗೆ ಸಾಕಷ್ಟು ವಿರೋಧಗಳು ಕೇಳಿ ಬರುತ್ತಿದ್ದರೂ, ಸೋಮವಾರದಿಂದ ನಡೆಯುವ ಬೆಳವಣಿಗೆಗೂ ತಮಗೂ ಏನೂ ಸಂಬಂಧ ಇಲ್ಲದಂತೆ ತಟಸ್ಥವಾಗಿ ಉಳಿಯುವ ಮೂಲಕ ಸರ್ಕಾರವನ್ನು ಉರುಳಿಸುವ ಲೆಕ್ಕಾಚಾರ ಬಿಜೆಪಿ ನಾಯಕರದ್ದು ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, 20ಕ್ಕೂ ಹೆಚ್ಚು ಶಾಸಕರು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಗಂಭೀರವಾಗಿ ಚರ್ಚಿತವಾಗುತ್ತಿದೆ.

ಬಿಜೆಪಿ ಸೇರಬೇಕೆಂದುಕೊಂಡಿರುವ ಶಾಸಕರ ಜೊತೆಗೆ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ಅವರ ನಿರೀಕ್ಷೆಯಂತೆ ಸೋಮವಾರದಿಂದ ಸಮ್ಮಿಶ್ರ ಸರ್ಕಾರ ಬೀಳಿಸುವ ಕಾರ್ಯ ಆರಂಭವಾಗಲಿದೆ ಎನ್ನಲಾಗುತ್ತಿದೆ.

ಬಿಜೆಪಿ ಲೆಕ್ಕಾಚಾರ: ಬಿಜೆಪಿ ಮೂಲಗಳ ಪ್ರಕಾರ ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಸೋಮವಾರವೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಅದಾದ ನಂತರ ಉಳಿದ 19 ಕ್ಕೂ ಹೆಚ್ಚು ಶಾಸಕರು ಮಂಗಳವಾರ ಸ್ವಯಂ ಪ್ರೇರಿತರಾಗಿ ವೈಯಕ್ತಿಕ ಕಾರಣ ನೀಡಿ ವಿಧಾನ ಸಭಾಧ್ಯಕ್ಷರಿಗೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಒಂದು ವೇಳೆ ವಿಧಾನಸಭಾಧ್ಯಕ್ಷರು ರಾಜೀನಾಮೆ ಅಂಗೀಕರಿಸದಿದ್ದರೆ, ಸಮ್ಮಿಶ್ರ ಸರ್ಕಾರದ ಮೇಲೆ ತಮಗೆ ವಿಶ್ವಾಸ ಇಲ್ಲ ಎಂದು ರಾಜ್ಯಪಾಲರಿಗೂ ರಾಜಿನಾಮೆ ಪತ್ರ ಸಲ್ಲಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಎಲ್ಲ ಬೆಳವಣಿಗೆಯಲ್ಲಿ ಬಿಜೆಪಿಯ ಯಾವುದೇ ಪಾತ್ರ ಇಲ್ಲ ಎನ್ನುವುದನ್ನು ಬಿಂಬಿಸುವಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಏಕ ಪಕ್ಷೀಯ ನಿರ್ಧಾರ, ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡದಿರುವುದು, ಉತ್ತರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಧೋರಣೆಯೇ ಶಾಸಕರ ಈ ನಿರ್ಧಾರಕ್ಕೆ ಕಾರಣ ಎನ್ನುವುದನ್ನು ಬಿಂಬಿಸಿ, ಸಮ್ಮಿಶ್ರ ಸರ್ಕಾರದ ದುರಾಡಳಿತ ಹಾಗೂ ಎರಡೂ ಪಕ್ಷಗಳಲ್ಲಿನ ಹೊಂದಾಣಿಕೆ ಕೊರತೆಯಿಂದ ಸರ್ಕಾರ ಪತನವಾಯಿತು ಎಂಬ ಅಭಿಪ್ರಾಯ ಮೂಡುವಂತೆ ನೋಡಿಕೊಳ್ಳಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಎಲ್ಲ ಶಾಸಕರೂ ಅಂದೇ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಪಕ್ಷಾಂತರ ನಿಷೇಧ ಕಾಯ್ದೆಯ ತೂಗುಕತ್ತಿಯಿಂದಲೂ ಪಾರಾಗಲೂ ಕಾನೂನು ಸಲಹೆಯನ್ನೂ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಆರ್ಥಿಕ ಕಾರಣ? : ಸಮ್ಮಿಶ್ರ ಸರ್ಕಾರದಲ್ಲಿ ಬಹುತೇಕ ಶಾಸಕರಿಗೆ ತಮ್ಮ ಕ್ಷೇತ್ರದ ಕೆಲಸಗಳು ಆಗುತ್ತಿಲ್ಲ ಎನ್ನುವುದು ಒಂದು ಕಾರಣವಾದರೆ, ಬಹುತೇಕ ಶಾಸಕರ ಆರ್ಥಿಕ ವ್ಯವಹಾರಗಳೂ ಈ ಬೆಳವಣಿಗೆಗೆ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ. ವೈಯುಕ್ತಿಕವಾಗಿ ಅನೇಕ ಶಾಸಕರಿಗಿರುವ ಆರ್ಥಿಕ ಜವಾಬ್ದಾರಿ ನಿಭಾಯಿಸಿಕೊಳ್ಳಲು ಈ ಬೆಳವಣಿಗೆಗೆ ಮುಂದಾಗುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಶಾಸಕರಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಧಿಕಾರ ನೀಡುವ ಭರವಸೆ ನೀಡಿದ್ದರೂ, ಮುಂಬರುವ ಉಪ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿಕೊಂಡು ಬರುವ ಬಗ್ಗೆ ಖಚಿತ ಭರವಸೆ ದೊರೆತಿಲ್ಲ ಎಂದು ಹೇಳಲಾಗುತ್ತಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಶಾಸಕರು ಸೆ. 18 ರಂದು ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಈ ಶಾಸಕರೊಂದಿಗೆ ಮುಳಬಾಗಿಲು ಶಾಸಕ ನಾಗೇಶ್‌ ಹಾಗೂ ರಾಣೆಬೆನ್ನೂರು ಶಾಸಕ ಹಾಗೂ ಅರಣ್ಯ ಸಚಿವ ಆರ್‌. ಶಂಕರ್‌ ಕೂಡ ಬಿಜೆಪಿ ಜೊತೆ ಕೈ ಜೋಡಿಸಲಿದ್ದಾರೆ ಎಂಬುದು ಬಿಜೆಪಿ ಲೆಕ್ಕಾಚಾರ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್‌ ಪ್ರಯತ್ನ
ಆಪರೇಷನ್‌ ಕಮಲಕ್ಕೆ ತುತ್ತಾಗಲು ಮುಂದಾಗಿರುವ ಶಾಸಕರನ್ನು ಪಕ್ಷದಲ್ಲಿಯೇ ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್‌ ನಾಯಕರು ನಿರಂತರ ಪ್ರಯತ್ನ ನಡೆಸುತ್ತಿದ್ದು, ಭಾನುವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಗಳೂರಿಗೆ ಆಗಮಿಸಲಿದ್ದು, ಅವರ ಮೂಲಕ ಶಾಸಕರ ವಲಸೆಯನ್ನು ತಡೆಯಲು ಕೈ ನಾಯಕರು ಮುಂದಾಗಿದ್ದಾರೆ.

ಬಿಜೆಪಿ ಲೆಕ್ಕಾಚಾರ ಪಟ್ಟಿಯಲ್ಲಿರುವ ಶಾಸಕರು
ಎಂಟಿಬಿ ನಾಗರಾಜ್‌-ಹೊಸಕೋಟೆ (ಕಾಂ)
ಕೃಷ್ಣಾ ರೆಡ್ಡಿ-ಚಿಂತಾಮಣಿ (ಜೆಡಿಎಸ್‌)
ರಮೇಶ್‌ ಜಾರಕಿಹೊಳಿ-ಗೋಕಾಕ್‌ (ಕಾಂ)
ಮಹೇಶ್‌ ಕಮಟೊಳ್ಳಿ-ಅಥಣಿ (ಕಾಂ)
ಬಸನಗೌಡ ದದ್ದಲ್‌-ರಾಯಚೂರು ಗ್ರಾಮಾಂತರ (ಕಾಂ)
ಪ್ರತಾಪ್‌ಗೌಡ ಪಾಟೀಲ್‌-ಮಸ್ಕಿ (ಕಾಂ)
ಆನಂದ್‌ ಸಿಂಗ್‌-ಹೊಸಪೇಟೆ (ಕಾಂ)
ಜೆ.ಎನ್‌. ಗಣೇಶ್‌- ಕಂಪ್ಲಿ. (ಕಾಂ)
ನಾಗೇಂದ್ರ-ಬಳ್ಳಾರಿ ಗ್ರಾಂ. (ಕಾಂ)
ಎಂ.ವೈ ಪಾಟೀಲ್‌- ಅಫ‌ಜಲ್‌ಪುರ (ಕಾಂ)
ಬಿ.ಸಿ. ಪಾಟೀಲ್‌-ಹಿರೆಕೇರೂರು(ಕಾಂ)
ದೇವಾನಂದ ಚೌಹಾನ್‌-ನಾಗಠಾಣ (ಜೆಡಿಎಸ್‌)
ಸುಬ್ಟಾರೆಡ್ಡಿ-ಬಾಗೇಪಲ್ಲಿ (ಕಾಂ)
ವಿ.ಮುನಿಯಪ್ಪ-ಶಿಡ್ಲಘಟ್ಟ (ಕಾಂ)
ನಂಜೇಗೌಡ-ಮಾಲೂರು (ಕಾಂ)
ಅನಿಲ್‌ ಕುಮಾರ್‌-ಹೆಚ್‌.ಡಿ. ಕೋಟೆ (ಕಾಂ)
ನಾರಾಯಣರಾವ್‌-ಬಸವಕಲ್ಯಾಣ (ಕಾಂ)
ಡಿ.ಎಸ್‌. ಹೂಲಗೇರಿ-ಲಿಂಗಸಗೂರು (ಕಾಂ)
ಶ್ರೀಮಂತ ಪಾಟೀಲ್‌-ಕಾಗವಾಡ (ಜೆಡಿಎಸ್‌)
ಆರ್‌.ಶಂಕರ್‌-ರಾಣೆಬೆನ್ನೂರು (ಪಕ್ಷೇತರ)
ನಾಗೇಶ್‌-ಮುಳಬಾಗಿಲು (ಪಕ್ಷೇತರ)

ಕಾಂಗ್ರೆಸ್‌-ಜೆಡಿಎಸ್‌ನಿಂದಲೇ ಆಪರೇಷನ್‌
ಬೆಂಗಳೂರು: ಮೈತ್ರಿ ಸರ್ಕಾರ ಕೆಡವಲು ಹಣ ಸಂಗ್ರಹಕ್ಕೆ ಬಿಜೆಪಿ ಕಿಂಗ್‌ಪಿನ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಆಂತರಿಕ ಕಚ್ಚಾಟದಿಂದಾಗಿ ಆತಂಕಗೊಂಡು ಸರ್ಕಾರ ಉಳಿಸಿಕೊಳ್ಳಲು ಆಪರೇಷನ್‌ ನಡೆಸುತ್ತಿರುವುದು ಕಾಂಗ್ರೆಸ್‌ ಮತ್ತು ಜೆಡಿಎಸ್‌. ಆದರೆ, ಅನುಕಂಪ ಗಿಟ್ಟಿಸಲು ಮಾಫಿಯಾಗಳ ಹೆಗಲ ಮೇಲೆ ಬಂದೂಕು ಇಟ್ಟು ಬಿಜೆಪಿಗೆ ಗುಂಡು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡಿದೆ.

Comments are closed.