
ಬೆಂಗಳೂರು: ಜಾರಕಿಹೊಳಿ ಸಹೋದರರ ಅಸಮಾಧಾನದ ವಿಚಾರ ಸರ್ಕಾರದ ಅಸ್ಥಿತ್ವದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳ ಹಿನ್ನಲೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ವಿದೇಶ ಪ್ರವಾಸದಿಂದ ವಾಪಾಸಾಗಿರುವ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೊಂದಿಗೆ ಭಾನುವಾರ ಮಹತ್ವದ ಮಾತುಕತೆ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ , ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಭಾಗಿಯಾಗಿದ್ದರು.
ಸಭೆಯಲ್ಲಿ ಪ್ರಮುಖವಾಗಿ ಜಾರಕಿಹೊಳಿ ಸಹೋದರರ ವಿಚಾರವೇ ಚರ್ಚೆಯಾಗಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಿದ್ದರಾಮಯ್ಯ ಅವರಿಗೆ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಬಿಜೆಪಿಗೆ ಕಪ್ಪು ಹಣದ ಬಲ
ಸಭೆಯ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ವೇಣುಗೋಪಾಲ್ ಅವರು ಬೆಳಗಾವಿಯ ಪಿಎಲ್ಡಿ ಬ್ಯಾಂಕ್ ಚುನಾವಣೆ ವಿಚಾರ ದೊಡ್ಡ ಸಮಸ್ಯೆ ಅಲ್ಲ. ಅದು ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ. ಅದನ್ನು ರಾಜ್ಯ ನಾಯಕರು ಪರಿಹರಿಸಿದ್ದಾರೆ ಎಂದರು.
ಬಿಜೆಪಿ ಕಪ್ಪು ಹಣದ ಬಲ ಮತ್ತು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಸರ್ಕಾರ ಪತನಗೊಳಿಸಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಸರ್ಕಾರ ಪತನಗೊಳಿಸುವುದು ಸಾಧ್ಯವಿಲ್ಲ, ನಮ್ಮ ಪಕ್ಷದ ಶಾಸಕರ ಬಗ್ಗೆ ನಂಬಿಕೆ ಇದೆ. ಯಾರನ್ನೂ ಸೆಳೆಯುವುದು ಬಿಜೆಪಿಗೆ ಅಸಾಧ್ಯವಾದ ಮಾತು ಎಂದರು.
ಕರೆದರೆ ಮಾತುಕತೆಗೆ ಬರುತ್ತೇವೆ
ಸತೀಶ್ ಜಾರಕಿಹೊಳಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ನಾವು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಸರ್ಕಾರ ಪತನವಾಗುವುದಿಲ್ಲ. ಸಿದ್ದರಾಮಯ್ಯ ಅವರು ಕರೆದರೆ ಮಾತುಕತೆಗೆ ತೆರಳುವುದಾಗಿ ತಿಳಿಸಿದ್ದಾರೆ.
Comments are closed.