
(ಸಾಂದರ್ಭಿಕ ಚಿತ್ರ)
ಮಂಗಳೂರು, ಡಿಸೆಂಬರ್.02: ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಬಂಧಿಸಿರುವ ನಗರದ ಪಾಂಡೇಶ್ವರ ಠಾಣಾ ಪೊಲೀಸರು ಬಂಧಿತನಿಂದ 120 ಗ್ರಾಂ ತೂಕದ 2. 20ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಮೈಸೂರು ಕುಂಬಾರ ಕೊಪ್ಪಲ ನಿವಾಸಿ (ಪ್ರಸ್ತುತ ಫಲ್ನೀರ್ ವಾಸ್ ಲೇನ್ ನಿವಾಸಿ) ನವೀನ್ ಕುಮಾರ್ (29) ಎಂದು ಗುರುತಿಸಲಾಗಿದೆ.
ಮೋಹನ್ ಭಂಡಾರಿ ಎಂಬವರು ಆ.24ರಂದು ರಾತ್ರಿ 9:15ಕ್ಕೆ ಮನೆಗೆ ಬೀಗ ಹಾಕಿ ಬೆಂಗಳೂರಿನಲ್ಲಿರುವ ಮಗ ಮತ್ತು ಹೆಂಡತಿಯನ್ನು ಕಾಣಲು ಹೋಗಿದ್ದರು. ಸೆ.12ರಂದು ಮಧ್ಯಾಹ್ನ 2:30ಕ್ಕೆ ಮರಳಿ ಮನೆಗೆ ಬಂದಿದ್ದು, ಈ ನಡುವೆ ಮನೆಯ ಗೋಡ್ರೇಜ್ನ ಲಾಕರ್ನಲ್ಲಿರಿಸಿದ್ದ 120 ಗ್ರಾಂ ತೂಕದ ನಾನಾ ಮಾದರಿಯ ಚಿನ್ನಾಭರಣ ಮತ್ತು ವಿಜಯ ಬ್ಯಾಂಕ್ ಚೆಕ್ ಬುಕ್ ಕಳವಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ನಿರೀಕ್ಷಕರು ಆರೋಪಿಯನ್ನು ಬಂಧಿಸಿದ್ದಾರೆ.
ಈತನ ಮೇಲೆ ಈಗಾಗಲೇ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ಈತ ಜೈಲಿನಲ್ಲಿದ್ದು ಬಳಿಕ ಜಾಮೀನು ಮೇಲೆ ಬಿಡುಗಡೆಗೊಂಡಿದ್ದ.
ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್, ಡಿಸಿಪಿಗಳಾದ ಹನುಮಂತರಾಯ, ಉಮಾಪ್ರಶಾಂತ್, ಹಾಗೂ ಮಂಗಳೂರು ಸೆಂಟ್ರಲ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಭಾಸ್ಕರ್ ವಿ.ಬಿ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಕೆ.ಎಂ. ಶರೀಫ್, ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಪರಾಧ ಪತ್ತೆ ವಿಭಾಗದ ಪೊಲೀಸ್ ಉಪ ನಿರೀಕ್ಷಕರಾದ ಮಂಜುಳಾ.ಎಲ್ ಮತ್ತು ಕಾನೂನು ಸುವ್ಯವಸ್ಥೆಯ ಪೊಲೀಸ್ ಉಪನಿರೀಕ್ಷಕರಾದ ರಾಜೇಂದ್ರ ಹಾಗೂ ಮಂಗಳೂರು ದಕ್ಷಿಣ ಠಾಣೆಯ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಯವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
Comments are closed.