ಬೆಂಗಳೂರು: ಕರ್ನಾಟಕದ ಐಪಿಎಸ್ ಅಧಿಕಾರಿ ಡಾ. ಮಧುಕರ್ ಶೆಟ್ಟಿ ಸಾವಿನ ಕುರಿತು ನಡೆದ ತನಿಖೆಯ ಪ್ರಾಥಮಿಕ ವರದಿ ಸಿದ್ಧಗೊಂಡಿದೆ. ಈ ವರದಿ ಇದೇ ತಿಂಗಳು ಸರ್ಕಾರಕ್ಕೆ ಸಲ್ಲಿಕೆಯಾಗುವ ಸಾಧ್ಯತೆ ಇದೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಡಿ.25ರಂದು ಮಧುಕರ್ ಶೆಟ್ಟಿ ಅವರನ್ನು ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಡಿ. 28ರಂದು ಮಧುಕರ್ ಶೆಟ್ಟಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅವರ ಸಾವಿಗೆ ಹೆಚ್1ಎನ್1 ಕಾರಣ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದರು.
ಆದರೆ, ಮಧುಕರ್ ಶೆಟ್ಟಿ ಸಾವಿನ ಬಗ್ಗೆ ಕುಟುಂಬದವರು ಹಾಗೂ ಸ್ನೇಹಿತರು ಅನುಮಾನ ವ್ಯಕ್ತಪಡಿಸಿದ್ದರು. ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗಲಿಲ್ಲ ಎನ್ನುವ ಆರೋಪ ಕೇಳಿ ಬಂದಿತ್ತು. ಹಾಗಾಗಿ, ರಾಜ್ಯ ಸರ್ಕಾರ ಈ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಿತ್ತು. ನಾರಾಯಣ ಹೃದಯಾಲಯದ ಡಾ. ದೇವಿಶೆಟ್ಟಿ ಈ ತಂಡದ ನೇತೃತ್ವ ವಹಿಸಿಕೊಂಡಿದ್ದರು.
ವೈದ್ಯರು, ಸರ್ಕಾರಿ ಅಧಿಕಾರಿಗಳನ್ನು ಒಳಗೊಂಡ 6 ಜನರ ವಿಶೇಷ ತಜ್ಞರ ಸಮಿತಿ ಮಧುಕರ ಶೆಟ್ಟಿ ಸಾವಿನ ಸುತ್ತ ತನಿಖೆ ನಡೆಸಿದೆ. ಈಗಾಗಲೇ ಪ್ರಾಥಮಿಕ ವರದಿ ಸಿದ್ಧಪಡಿಸಿರುವ ತಜ್ಞರ ಸಮಿತಿ, ಇದೇ ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ. ಈ ವರದಿಯಿಂದ ಮಧುಕರ ಶೆಟ್ಟಿ ಸಾವಿನ ಸುತ್ತ ಕೇಳಿಬಂದ ಆರೋಪ ಸತ್ಯವಾಗಲಿದೆಯೇ ಅಥವಾ ಅನುಮಾನ ಬಗೆಹರಿಯಲಿದೆಯೇ ಎನ್ನುವ ಕುತೂಹಲ ಮೂಡಿದೆ.
ದಕ್ಷ ಅಧಿಕಾರಿಯ ಹೆಜ್ಜೆ ಗುರುತುಗಳು
1999ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಮಧುಕರ್ ಶೆಟ್ಟಿ, ಕರ್ನಾಟಕದ ಉಡುಪಿ ಜಿಲ್ಲೆಯವರು. ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಬರೆಯುವ ಮುನ್ನ ಅವರು ದೆಹಲಿಯ ಜವಹರಲಾಲ್ ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಧುಕರ್ ಶೆಟ್ಟಿ ಸಾಮಾಜಿಕ ಕಳಕಳಿ ಹೊಂದಿರುವ ಅಧಿಕಾರಿ ಎಂಬ ಹೆಸರನ್ನ ಜನಸಾಮಾನ್ಯರಿಂದ ಗಳಿಸಿದ್ದರು.
ಮಧುಕರ್ ಶೆಟ್ಟಿ ಈ ಹಿಂದೆ ಚಿಕ್ಕಮಗಳೂರು ಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ, ಡಿಸಿ ಹರ್ಷ ಗುಪ್ತಾ ಜತೆಗೂಡಿ ದಲಿತ ಸಮುದಾಯದ ಬೆನ್ನೆಲುಬಾಗಿ ನಿಂತಿದ್ದರು. ದಲಿತರ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದ ವ್ಯಕ್ತಿಗಳಿಂದ ಜಮೀನು ಬಿಡಿಸಿ ದಲಿತರಿಗೆ ನೀಡಿದ್ದರು. ನಂತರ ಆ ಹಳ್ಳಿಯ ಹೆಸರನ್ನು ‘ಗುಪ್ತಶೆಟ್ಟಿ’ ಹಳ್ಳಿ ಎಂದು ನಾಮಕರಣ ಮಾಡಲಾಗಿತ್ತು. ಈಗಲೂ ಆ ಹಳ್ಳಿಯಲ್ಲಿರುವ ನೂರಾರು ಮಂದಿ ಮಧುಕರ್ ಶೆಟ್ಟಿ ಅವರು ಮಾಡಿದ ಕೆಲಸವನ್ನು ನೆನೆಯುತ್ತಾರೆ.
ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಕಾರ್ಯವೈಖರಿ ಬಗ್ಗೆ ಅಸಮಾಧಾನಗೊಂಡು ಉನ್ನತ ವಿದ್ಯಾಭ್ಯಾಸದ ರಜೆಯ ಮೇಲೆ ಮಧುಕರ್ ಶೆಟ್ಟಿ 2011ರಲ್ಲಿ ತೆರಳಿದ್ದರು. ಅದಾಗಿ ಬರೋಬ್ಬರಿ ಐದು ವರ್ಷಗಳ ಕಾಲ ಮಧುಕರ್ ಶೆಟ್ಟಿ ಅಮೆರಿಕದಲ್ಲಿ ಅಧ್ಯಯನ ನಡೆಸಿದ್ದರು. ಆ ಸಂದರ್ಭದಲ್ಲಿ ಬಹಿರಂಗವಾಗಿಯೇ ಸಂತೋಷ್ ಹೆಗಡೆ ಅವರ ಮೇಲೆ ಅಸಮಾಧಾನವನ್ನು ಹೊರ ಹಾಕಿದ್ದರು. ಸಂತೋಷ್ ಹೆಗಡೆ ಕೆಲ ವಿಚಾರಗಳಲ್ಲಿ ತಾರತಮ್ಯ ಮಾಡುತ್ತಿದ್ದರು ಎಂಬ ಗಂಭೀರ ಆರೋಪವನ್ನು ಮಧುಕರ್ ಶೆಟ್ಟಿ ಮಾಡಿದ್ದರು.
ನಂತರ ಐಜಿಪಿಯಾಗಿ ಬಡ್ತಿ ಪಡೆದ ಅವರು ಕೆಲ ಕಾಲ ಪೊಲೀಸ್ ನೇಮಕಾತಿ ವಿಭಾಗದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದರು. ಅದಾದ ಕೆಲವೇ ದಿನಗಳಲ್ಲಿ ಕೇಂದ್ರ ಸೇವೆಗೆ ತೆರಳಿದ ಅವರು ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಉಪ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಹಿರಿಯ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ್ ಶೆಟ್ಟಿ ಅವರ ಮಗನಾದ ಮಧುಕರ್ ಶೆಟ್ಟಿ ಹಲವು ಮಹತ್ವದ ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸಿದವರು. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್ಪಿಯಾಗಿ ಕೆಲಸ ಮಾಡಿದ್ದರು. ವೀರಪ್ಪನ್ ಬಂಧನಕ್ಕೆ ರಚಿಸಿದ್ದ ಸ್ಪೆಷಲ್ ಟಾಸ್ಕ್ ಫೋರ್ಸ್ನಲ್ಲೂ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ನ್ಯೂಯಾರ್ಕ್ನ ವಿವಿಯೊಂದರಲ್ಲಿ ಸಾರ್ವಜನಿಕ ಆಡಳಿತ ವಿಷಯದಲ್ಲಿ ಪಿಹೆಚ್ಡಿ ಪಡೆದಿದ್ದ ಅವರು 2017ರ ಮಾರ್ಚ್ನಲ್ಲಿ ಹೈದರಾಬಾದ್ನ ಐಪಿಎಗೆ ಸೇರ್ಪಡೆಗೊಂಡಿದ್ದರು.
Comments are closed.