ಮುಂಬೈ

ಎರಡೂವರೆ ವರ್ಷ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತೇವೆ ಎಂದು ಶಿವಸೇನೆಗೆ ಹೇಳಿರಲಿಲ್ಲ: ದೇವೇಂದ್ರ ಫಡ್ನವಿಸ್

Pinterest LinkedIn Tumblr


ಮುಂಬೈ: 2019ರ ಲೋಕಸಭೆ ಚುನಾವಣೆಗೆ ಮುನ್ನ ಮೈತ್ರಿ ಮಾಡಿಕೊಂಡಿದ್ದ ಸಂದರ್ಭದಲ್ಲಿ ಎರಡೂವರೆ ವರ್ಷ ಸಿಎಂ ಹುದ್ದೆ ಬಿಟ್ಟುಕೊಡುವುದಾಗಿ ಶಿವಸೇನೆಗೆ ಮಾತು ಕೊಟ್ಟಿರಲಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮುಗಿದು ಫಲಿತಾಂಶ ಹೊರಬಂದು ಬಿಜೆಪಿ-ಶಿವಸೇನೆ ಪರ ಜನ ತೀರ್ಪು ಕೊಟ್ಟ ನಂತರ ಇದೀಗ ಅಧಿಕಾರಕ್ಕಾಗಿ ಎರಡೂ ಪಕ್ಷಗಳ ಮಧ್ಯೆ ಜಗಳ, ಭಿನ್ನಾಭಿಪ್ರಾಯಗಳು ಆರಂಭವಾಗಿದೆ. ಮುಂದಿನ ಸರ್ಕಾರ ರಚನೆ ಮಾಡುವುದು ಹೇಗೆ, ಯಾವ ಪಕ್ಷಕ್ಕೆ ಎಷ್ಟು ಅಧಿಕಾರ ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ. ಈ ಮಧ್ಯೆ ಸಿಎಂ ಹುದ್ದೆ ತನಗೂ ಬೇಕು ಎಂದು ಶಿವಸೇನೆ ಕೇಳುತ್ತಿದೆ.

ಇದೆಲ್ಲದಕ್ಕೂ ಫಡ್ನವೀಸ್ ಇಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮುಂದಿನ 5 ವರ್ಷಗಳ ಕಾಲ ನಾನೇ ಸಿಎಂ ಆಗಿರುತ್ತೇನೆ, ಅದರಲ್ಲಿ ಅನುಮಾನವೇ ಬೇಡ ಎಂದು ಹೇಳಿದ್ದಾರೆ.

2019ರ ಲೋಕಸಭೆ ಚುನಾವಣೆಗೆ ಮುನ್ನ, ರಾಜ್ಯದಲ್ಲಿ ಈ ಬಾರಿ ಅಧಿಕಾರಕ್ಕೆ ಬಂದರೆ 50:50 ಸೂತ್ರ ಅನುಸರಿಸೋಣ ಎಂದು ತಮ್ಮ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಧ್ಯೆ ಮಾತುಕತೆಯಾಗಿತ್ತು. ಅದಕ್ಕೆ ಬಿಜೆಪಿ ಒಪ್ಪಿಗೆ ಸೂಚಿಸಿತ್ತು ಎಂದು ಕಳೆದ ವಾರ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದರು.

ಇದಕ್ಕೆ ಇಂದು ಪ್ರತಿಕ್ರಿಯೆ ನೀಡಿರುವ ಫಡ್ನವಿಸ್, ನಮ್ಮ ಮಧ್ಯೆ ಅಂತಹ ಯಾವುದೇ ಒಪ್ಪಂದಗಳಾಗಿಲ್ಲ. ಎರಡೂವರೆ ವರ್ಷ ಸಿಎಂ ಹುದ್ದೆ ಬಿಟ್ಟುಕೊಡುವುದಾಗಿ ಎಲ್ಲಿಯೂ ಹೇಳಿಲ್ಲ. ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ಸ್ಥಿರ ಮತ್ತು ದಕ್ಷ ಆಡಳಿತವನ್ನು ಮುಂದಿನ 5 ವರ್ಷಗಳ ಕಾಲ ನೀಡಲಿದೆ ಎಂದು ಇಂದು ತಮ್ಮ ಅಧಿಕೃತ ನಿವಾಸ ವರ್ಷಾದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಹೊಸ ನಾಯಕನ ಆಯ್ಕೆ; ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬುಧವಾರ ನಡೆಯಲಿದ್ದು ಅಂದು ಹೊಸ ನಾಯಕನ ಆಯ್ಕೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಹೆಸರನ್ನು ಘೋಷಿಸಿದ್ದು ನಾಡಿದ್ದು ನಡೆಯುವ ಸಭೆ ಔಪಚಾರಿಕ ಮಾತ್ರ ಎಂದರು.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 105 ಸ್ಥಾನಗಳನ್ನು ಗೆದ್ದರೆ ಶಿವಸೇನೆ 56 ಸೀಟುಗಳಲ್ಲಿ ಗೆದ್ದಿದೆ. ಕಾಂಗ್ರೆಸ್ 44 ಹಾಗೂ ಎನ್ ಸಿಪಿ 54 ಸ್ಥಾನಗಳಲ್ಲಿ ಜಯಗಳಿಸಿದೆ.

Comments are closed.