ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್
ಮಂಗಳೂರು : ರಾಜ್ಯದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ಸಮಾಜ ಘಾತಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಬಿಜೆಪಿ ಸರ್ಕಾರ ಬದ್ಧವಾಗಿದೆ. ಮಂಗಳೂರು ಸಹಿತ ರಾಜ್ಯದ ಹಲವೆಡೆ ದುಷ್ಕರ್ಮಿಗಳು ಅಶಾಂತಿ ಉಂಟು ಮಾಡಲು ವ್ಯವಸ್ಥಿತ ಸಂಚು ನಡೆಸಿದ್ದು, ಕಠಿಣ ಕ್ರಮ ಕೈಗೊಳ್ಳುವುದು ಪೊಲೀಸರಿಗೆ ಅನಿವಾರ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.
ಪೌರತ್ವ ಕಾಯ್ದೆ ವಿರೋಧಿಸುವ ನೆಪದಲ್ಲಿ ಸಮಾಜ ಘಾತಕರು ಅಲ್ಲಲ್ಲಿ ಹಿಂಸಾಕೃತ್ಯಗಳಲ್ಲಿ ತೊಡಗಿದ್ದರೂ, ಮಂಗಳೂರು ನಗರ ಶಾಂತವಾಗಿತ್ತು. ಆದರೆ ಕಾಂಗ್ರೆಸ್ನ ಮಾಜಿ ಸಚಿವ ಯು.ಟಿ.ಖಾದರ್ ಕರ್ನಾಟಕ ಹೊತ್ತಿ ಉರಿಯಲಿದೆ ಎಂದು ನೇರ ಪ್ರಚೋದನೆ ನೀಡಿದ್ದು ಮಂಗಳೂರಿನಲ್ಲಿ ಗಲಭೆ ನಡೆಯಲು ಕಾರಣವಾಗಿದೆ.
ಜವಾಬ್ದಾರಿಯುತ ಸ್ಥಾನದಲ್ಲಿರುವ ಖಾದರ್ ಈಗ ಜನರ ನಡುವೆ ದ್ವೇಷ ಹುಟ್ಟಿಸಿ ಇಡೀ ಕರಾವಳಿಯಲ್ಲಿ ಅಶಾಂತಿ ಸೃಷ್ಟಿಸಿದ್ದಾರೆ. ಇಂತಹ ದುಷ್ಕೃತ್ಯಗಳಿಗೆ ಬಿಜೆಪಿ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಸಂಸದರು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.