ರಾಷ್ಟ್ರೀಯ

ಕೋವಿಡ್ 19: ಮಹಾರಾಷ್ಟ್ರದಲ್ಲಿ 690, ತಮಿಳುನಾಡು 571 ಪ್ರಕರಣಗಳು

Pinterest LinkedIn Tumblr


ನವದೆಹಲಿ: ಕಳೆದ 24 ಗಂಟೆಯಲ್ಲಿ 472 ಕೋವಿಡ್ 19 ಸೋಂಕು ಪೀಡಿತರ ಪ್ರಕರಣ ಪತ್ತೆಯಾಗಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ವೈರಸ್ ಪೀಡಿತರ ಸಂಖ್ಯೆ 3,374ಕ್ಕೆ ಏರಿದ್ದು, ಸಾವಿನ ಸಂಖ್ಯೆ 80ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್, ಶನಿವಾರದವರೆಗೆ 472 ನೂತನ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. ಇವರಲ್ಲಿ 267 ಜನರು ಗುಣಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 276ಕ್ಕೆ ಏರಿದ್ದು, ಏಪ್ರಿಲ್ 5ರಂದು 48 ಹೊಸ ಪ್ರಕರಣಗಳು ಪತ್ತೆಯಾಗಿವೆ. ಆಗ್ರಾದಲ್ಲಿ ಮೂವರ ವರದಿ ಪಾಸಿಟಿವ್ ಎಂದು ಬಂದಿದೆ ಎಂದು ವರದಿ ತಿಳಿಸಿದೆ.

ಮುಂಬೈನಲ್ಲಿ ಭಾನುವಾರ ಪರೀಕ್ಷೆ ನಡೆಸಿದ 29 ಮಂದಿಯಲ್ಲಿ ಕೋವಿಡ್ 19 ಸೋಂಕು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದೆ. ಮಹಾರಾಷ್ಟ್ರದಲ್ಲಿ ಒಟ್ಟು ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 690ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

ಏಪ್ರಿಲ್ 4ರವರೆಗೆ ಮಹಾರಾಷ್ಟ್ರದಲ್ಲಿ 32 ಮಂದಿ ಸಾವನ್ನಪ್ಪಿದ್ದರು. ಇದರಲ್ಲಿ 22 ಮಂದಿ ಮುಂಬೈ, ಇಬ್ಬರು ಪುಣೆ, ಐವರು ಮುಂಬೈ ಮಹಾನಗರಪಾಲಿಕೆ, ಬುಲ್ದಾನಾ, ಜಲ್ಗಾಂವ್ ಮತ್ತು ಅಮರಾವತಿ ಪ್ರದೇಶದಲ್ಲಿ ತಲಾ ಒಬ್ಬರು ಸೋಂಕು ಪೀಡಿತರು ಇದ್ದಿರುವುದಾಗಿ ವರದಿ ತಿಳಿಸಿದೆ. ಔರಾಂಗಬಾದ್ ನ ಎಂಟು ಜಿಲ್ಲೆಗಳಲ್ಲಿ ತಬ್ಲಿಘಿ ಜಮಾತ್ ಸಮಾವೇಶದಲ್ಲಿ ಭಾಗಿಯಾಗಿದ್ದ 265 ಮಂದಿ ಮಹಾರಾಷ್ಟ್ರಕ್ಕೆ ವಾಪಸ್ ಆಗಿದ್ದರು ಎಂದು ವರದಿ ತಿಳಿಸಿದೆ.

ಜಮ್ಮು ಕಾಶ್ಮೀರದಲ್ಲಿ ಭಾನುವಾರ 14 ಮಂದಿಗೆ ಮಾರಣಾಂತಿಕ ಕೋವಿಡ್ 19 ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಜಮ್ಮುಕಾಶ್ಮೀರದಲ್ಲಿ ಕೋವಿಡ್ ಸೋಂಕು ಪೀಡಿತರ ಸಂಖ್ಯೆ 106ಕ್ಕೆ ಏರಿದೆ. ನಾಲ್ಕು ಮಂದಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.

ಕೇರಳದಲ್ಲಿ ಭಾನುವಾರ ಮತ್ತೆ ಎಂಟು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ 256 ಮಂದಿಗೆ ಪಾಸಿಟಿವ್ ಎಂದು ವರದಿ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಕೇರಳದಲ್ಲಿ 314 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವೆ ಶೈಲಜಾ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಭಾನುವಾರದಂದು 86 ಕೋವಿಡ್ 19 ನೂತನ ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ 85 ಮಂದಿ
ನಿಜಾಮುದ್ದೀನ್ ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡವರು ಎಂದು ವರದಿ ತಿಳಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ಪೀಡಿತರ ಸಂಖ್ಯೆ 571ಕ್ಕೆ ಏರಿದೆ. ಸಾವಿನ ಸಂಖ್ಯೆ 5ಕ್ಕೆ ಏರಿದೆ ಎಂದು ವರದಿ ತಿಳಿಸಿದೆ.

Comments are closed.