
ಮಂಗಳೂರು, ನವೆಂಬರ್.05: ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತರಲು ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾಪ ಮಾಡಲಾಯಿತು. ಗೋಹತ್ಯೆ ನಿಷೇಧ ಕಾನೂನಿನ ಬಗ್ಗೆಯೂ ಪುನರ್ ವಿಮರ್ಶೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಹೇಳಿದರು.
ಮಂಗಳೂರಿನಲ್ಲಿ ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ನಗರದ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ ಕಮಿಟಿಯಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಲವ್ ಜಿಹಾದ್ ಬಗ್ಗೆ ಕಠಿಣ ಕಾನೂನು ತರಲು ಕೋರ್ ಕಮಿಟಿಯಲ್ಲಿ ಚರ್ಚಿಸಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಒಕ್ಕೊರಲ ತೀರ್ಮಾನವಾಗಿದೆ. ಸರ್ಕಾರದ ಮಟ್ಟದಲ್ಲಿ, ಅಧಿಕಾರಿಗಳು, ಮುಖಂಡರು ಚರ್ಚೆ ನಡೆಸಿ ಕಾನೂನು ತರಲು ಕೋರ್ ಕಮಿಟಿ ಸಲಹೆ ನೀಡಿದೆ” ಎಂದು ಹೇಳಿದರು.
ಕೋರ್ ಕಮಿಟಿಯಲ್ಲಿ ಪಂಚಾಯತ್ ಮಟ್ಟದ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗಿದೆ. ಪಂಚಾಯತ್ ಚುನಾವಣೆಯನ್ನು ಎದುರಿಸಲು ಬಿಜೆಪಿ ಸಿದ್ದವಾಗಿದೆ. ಮಂಡಲಗಳಲ್ಲಿ ವಾರ್ ರೂಂ, ಕಾಲ್ ಸೆಂಟರ್ಗಳು ಆರಂಭವಾಗುತ್ತದೆ” ಪಂಚಾಯತ್ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸುವ ಬಗ್ಗೆ ತಂತ್ರ ರೂಪಿಸಲಾಗಿದೆ ಎಂದು ಹೇಳಿದರು.
ಎರಡು ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿನ ವಿಶ್ವಾಸದ ಬಗ್ಗೆ ವಿಶ್ಲೇಷಣೆ ನಡೆದಿದ್ದು , ಶಿಕ್ಷಕರ, ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ವ್ಯಕ್ತಿಗಳು ಜಯ ಸಾಧಿಸಲಿದ್ದಾರೆ.
ಸಮಿತಿಯ ಸಭೆಯಲ್ಲಿ ರಾಜ್ಯಸಭೆ ಅಭ್ಯರ್ಥಿಗಳ ಬಗ್ಗೆಯೂ ಚರ್ಚೆಯಾಗಿದೆ. ಶಾರ್ಟ್ ಲಿಸ್ಟ್ ಮಾಡಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುತ್ತದೆ. ಈಗಾಗಲೇ 10-12 ಹೆಸರು ಬಂದಿದ್ದು, ಅದರಲ್ಲಿ ಆಯ್ದು ಕಳುಹಿಸಲಾಗುತ್ತದೆ. ಅಲ್ಲಿ ಕೇಂದ್ರ ಚುನಾವಣಾ ಸಮಿತಿ ಅಂತಿಮ ನಿರ್ಧಾರ ಮಾಡುತ್ತದೆ” ಎಂದು ಅರವಿಂದ ಲಿಂಬಾವಳಿ ಹೇಳಿದರು.
Comments are closed.