ಕರಾವಳಿ

ಅಸಂಘಟಿತ ವಲಯದ ಕಾರ್ಮಿಕರು ಪರಿಹಾರಕ್ಕೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

Pinterest LinkedIn Tumblr

ಉಡುಪಿ: ಕೋವಿಡ್ 2 ನೇ ಅಲೆಯ ಹಿನ್ನಲೆಯಲ್ಲಿ ವಿಧಿಸಲಾಗಿರುವ ನಿರ್ಬಂಧಗಳಿಂದ ಜಿಲ್ಲೆಯಲ್ಲಿನ ಅಸಂಘಟಿತ ವಲಯದ ಕಾರ್ಮಿಕರಿಗೆ ತೊಂದರೆಯಾಗಿದ್ದು, ಈ ವಲಯಗಳ ಕಾರ್ಮಿಕರಿಗಾಗಿ ರಾಜ್ಯ ಸರ್ಕಾರ ಘೋಷಿಸಿರುವ 2000 ರೂ ಗಳ ಪರಿಹಾರ ಧನವನ್ನು ಪಡೆಯುವ ಕುರಿತಂತೆ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ವಿಧಿಸಿರುವ ನಿರ್ಭಂದಗಳ ಕಾರಣದಿಂದ, ದೈನಂದಿನ ಉದ್ಯೋಗವನ್ನು ನಡೆಸಲಾಗದೇ ಆದಾಯ ಕಳೆದುಕೊಂಡಿರುವ ಅಸಂಘಟಿತ ಕಾರ್ಮಿಕರಾದ, ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು,ಟೈಲರ್ ಗಳು,ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಭಾರರು ಹಾಗೂ ಭಟ್ಟಿ ಕಾರ್ಮಿಕರು ಗಳಿಗೆ ಒಂದು ಬಾರಿ ಪರಿಹಾರವಾಗಿ ಸರ್ಕಾರ ಘೋಷಿಸಿರುವ 2000 ರೂ ಗಳ ನೆರವನ್ನು ಪಡೆಯುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಕಳೆದ ಸಾಲಿನಲ್ಲಿ ನೆರವು ಪಡೆದಿರುವ ಕಾರ್ಮಿಕರು ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅರ್ಜಿ ಸಲ್ಲಿಸಿರುವವರು ಹಾಗೂ ಅವರ ಕುಟುಂಬ ಸದಸ್ಯರು ಮತ್ತೊಮ್ಮೆ ಪ್ರತ್ಯೇಕ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಅವರ ಖಾತೆಗೆ ನೇರವಾಗಿ ಪರಿಹಾರದ ಮೊತ್ತ ಜಮೆ ಆಗಲಿದೆ. ಆದರೆ ಕಳದ ಬಾರಿ ಅರ್ಜಿ ಸಲ್ಲಿಸದೇ ಇರುವವರು, ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡಿರುವವರು , ಅರ್ಜಿ ಸಲ್ಲಿಸಬಹುದಾಗಿದ್ದು, ಕುಟುಂಬದ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು, ಪರಿಹಾರ ಪಡೆಯಲು ಬಿಪಿಎಲ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದ್ದು, 18 ರಿಂದ 65 ವರ್ಷ ವಯೋಮಿತಿಯೊಳಗಿನ ಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಜೂನ್ 7 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಎಂದರು.

ಅರ್ಹ ಕಾರ್ಮಿಕರು ಸೇವಾ ಸಿಂದು ಪೋರ್ಟಲ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗಿದ್ದು, ಬ್ಯಾಂಕ್ ಖಾತೆಯೊಂದಿಗೆ ಜೋಡಣೆಯಾಗಿರುವ ಆಧಾರ್ ಕಾರ್ಡ್, ಅಧಿಕೃತ ವಿಳಾಸದ ದಾಖಲೆ, ಬಿ.ಪಿಎಲ್ ಕಾರ್ಡ್ , ಬ್ಯಾಂಕ್ ಖಾತೆಯ ವಿವರಗಳು, ಸ್ವಯಂ ಘೋಷಣೆ ಮತ್ತು ವೃತ್ತಿಯ ಕುರಿತ ಉದ್ಯೋಗ ಪ್ರಮಾಣಪತ್ರವನ್ನು ಸಲ್ಲಿಸಬೇಕು, ಉದ್ಯೋಗ ಪ್ರಮಾಣಪತ್ರ ವಿತರಿಸಲು ನಿಯೋಜಿಸಿರುವ ಅಧಿಕಾರಿಗಳು , ಕಾರ್ಮಿಕರು ಸದ್ರಿ ವೃತ್ತಿ ನಿರ್ವಹಿಸುತ್ತಿರುವ ಕುರಿತು ಖಚಿತ ಪಡಿಸಿಕೊಂಡು ಪ್ರಮಾಣಪತ್ರವನ್ನು ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಪ್ರಸ್ತುತ ಕೋವಿಡ್ ನಿರ್ಬಂದಗಳ ಕಾರಣದಿಂದ ಜಿಲ್ಲೆಯ ಸೇವಾ ಸಿಂಧು ಕೇಂದ್ರಗಳನ್ನು ಮುಚ್ಚಿದ್ದು ಇದರಿಂದ ಪರಿಹಾರದ ಅರ್ಜಿಗಳನ್ನು ಸಲ್ಲಿಸಲು ತೊಂದರೆಯಾಗುತ್ತಿದೆ ಎಂದು ಕಾರ್ಮಿಕ ವಲಯಗಳ ಮುಖಂಡರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಸರ್ಕಾರವು ಚಾಲಕರು , ಕಲಾವಿದರು, ಅಸಂಘಟಿತ ವಲಯದ ಕಾರ್ಮಿಕರು, ಚಮ್ಮಾರರಿಗೆ ಕೋವಿಡ್ ಪರಿಹಾರ ಘೋಷಿಸಿದ್ದು, ಈ ವರ್ಗದ ಕಾರ್ಮಿಕರು ಪರಿಹಾರದ ಅರ್ಜಿಗಳನ್ನು ಸಲ್ಲಿಸಲು ಮಾತ್ರ ಜಿಲ್ಲೆಯ ಸೇವಾಸಿಂಧು ಕೇಂದ್ರಗಳನ್ನು , ಲಾಕ್ ಡೌನ್ ಇರುವ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಜೂನ್ 5 ರಂದು ಮತ್ತು ಇತರೆ ಕಡೆಗಳಲ್ಲಿ ಜೂನ್ 4 ಮತ್ತು 5 ರಂದು ಮಾತ್ರ ಬೆಳಗ್ಗೆ 6 ರಿಂದ 10 ರ ವರೆಗೆ ಮಾತ್ರ ತೆರೆಯುವಂತೆ ಜಿಲ್ಲಾಧಿಕಾರಿಗಳು ಆದೇಶಿದ್ದು, ಈ ಪರಿಹಾರದ ಅರ್ಜಿ ಹೊರತುಪಡಿಸಿ ಸೇವಾ ಕೇಂದ್ರಗಳಲ್ಲಿ ಇತರೇ ಯಾವುದೇ ವಸ್ತುಗಳ ಮಾರಾಟ ಅಥವಾ ಸೇವೆಗಳನ್ನು ನೀಡುವುದು ಕಂಡುಬಂದಲ್ಲಿ ಅಂತಹವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಅರುಣ ಪ್ರಭ, ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ , ಪೌರಾಯುಕ್ತ ಉದಯ ಶೆಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಹಾಗೂ ಅಸಂಘಟಿತ ವಲಯಗಳ ಕಾರ್ಮಿಕ ಮುಖಂಡರುಗಳು ಉಪಸ್ಥಿತರಿದ್ದರು.

Comments are closed.