ಕರಾವಳಿ

ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ : ಕೋಟ ಶ್ರೀನಿವಾಸ ಪೂಜಾರಿ

Pinterest LinkedIn Tumblr

ಮಂಗಳೂರು ಜೂನ್ 06 : ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ, ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಗಿಡ ನೇಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಗಾಂಧೀಜಿಯವರು ನುಡಿದಂತೆ, ಹಿಂದಿನವರು ನಮಗೆ ಬಿಟ್ಟುಕೊಟ್ಟು ಹೋದ ನೆಲ, ಜಲ, ಪರಿಸರವು ನಮ್ಮದಲ್ಲ. ಅದನ್ನು ಮುಂದಿನ ಜನಾಂಗಕ್ಕೆ ಕೊಡುಗೆಯಾಗಿ ನೀಡಬೇಕು, ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಅದು ಸಮಾಜದ ಆಸ್ತಿ ಎಂದರು.

ಸರ್ಕಾರ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ರಾಜ್ಯದಾದ್ಯಂತ 1.70 ಕೋಟಿಗೂ ಹೆಚ್ಚು ಗಿಡ-ಮರಗಳನ್ನು ಬೆಳೆಸಲು ಮುಂದಾಗಿದ್ದು, ಅರಣ್ಯ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಸೇರಿದಂತೆ ಇತರೆ ಇಲಾಖೆಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿವೆ ಎಂದರು.

ಪ್ರತಿಯೊಬ್ಬರಿಗೂ ಉತ್ತಮ ಆಮ್ಲಜನಕವನ್ನು ಒದಗಿಸುವ ಉದ್ಧೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದ ಅವರು, ಪರಿಸರವನ್ನು ನಿರ್ಲಕ್ಷಿಸಿದ್ದರಿಂದ ಅನೇಕ ಅನಾಹುತಗಳು ಆಗಿರುವುದನ್ನು ನಾವು ಕಣ್ಣ ಮುಂದೆ ಕಂಡಿದ್ದೇವೆ ಮುಂದೆ ಹೀಗೆ ಆಗದಂತೆ ಎಚ್ಚರ ವಹಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದರು.

ಈ ಬಾರಿಯ ಪರಿಸರ ದಿನಾಚರಣೆಯನ್ನು “ಪರಿಸರ ವ್ಯವಸ್ಥೆ ಪುನರ್ ಸ್ಥಾಪನೆ” ಎಂಬ ಘೋಷಣೆಯೊಂದಿಗೆ ಆಚರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕುಮಾರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್‍ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲೇ ಸ್ವಾಮಿ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.