ಬೆಂಗಳೂರು: ಕೇವಲ ಪೊಲೀಸರ ಕ್ಯಾಪ್ ಬದಲಾಗುವುದಲ್ಲ. ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ. ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
‘ಇಂದು ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನೂ ಆಯ್ಕೆ ಮಾಡಿದ್ದು ಕೂಡ ನಾನೆ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ’ ಎಂದು ಕರೆ ನೀಡಿದರು.

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ, ಇದು ಪೊಲೀಸ್ ಇಲಾಖೆಯ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ. ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ಧ ನಿಲುವು ತಳೆಯಬೇಕು. ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಮನಸ್ಸು ಮಾಡಿದರೆ ಕರ್ನಾಟಕ ಪೊಲೀಸರ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ.
ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ಪೊಲೀಸರಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ಆತ್ಮಸಾಕ್ಷಿಯನ್ನು ಕೇಳಿಕೊಳ್ಳಬೇಕು.
ಡ್ರಗ್ಸ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ಪೊಲೀಸರಿಗೆ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ, ‘ಡ್ರಗ್ ಮುಕ್ತ ಕರ್ನಾಟಕ’ ಆಗಲಿ, ಇದನ್ನು ಮಾಡಿ ತೋರಿಸಿ ಎಂದು ಸೂಚಿಸಿದರು.
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ, ಹಳೇ ಕಾಲದ ಸ್ಲೋಚ್ ಹ್ಯಾಟ್ಗೆ ವಿದಾಯ ಹೇಳಿ ಪೊಲೀಸ್ ಸಿಬ್ಬಂದಿಗೆ ಹೊಸ ಪೀಕ್ ಕ್ಯಾಪ್ ವಿತರಿಸಲಾಗದೆ. ಪ್ರತಿಭಟನೆ, ಆರೋಪಿಯನ್ನು ಹಿಡಿಯಲು ಓಡುವಾಗ, ಲಾಠಿಪ್ರಹಾರದ ವೇಳೆ ಸ್ಲೋಚ್ ಕ್ಯಾಪ್ ಕೆಳಗೆ ಬೀಳುತ್ತಿತ್ತು. ಪೊಲೀಸರ ಹ್ಯಾಟ್ ಕೆಳಗೆ ಬಿದ್ದರೆ ಸಮವಸ್ತ್ರಕ್ಕೆ ಅಗೌರವ ತೋರಿದಂತಾಗುತ್ತದೆ. ಹೀಗಾಗಿ ಕಳೆದ 4 ದಶಕಗಳಿಂದ ಪೀಕ್ ಕ್ಯಾಪ್ ನೀಡುವಂತೆ ಪೊಲೀಸರು ಬೇಡಿಕೆಯಿಟ್ಟಿದ್ದರು. ಇದನ್ನು ಪರಿಗಣಿಸಿ ಕಾಂಗ್ರೆಸ್ ಸರ್ಕಾರ ಹೊಸ ಮಾದರಿಯ ಕಡು ನೀಲಿ ಬಣ್ಣದ ಪೀಕ್ ಕ್ಯಾಪ್ ವಿತರಿಸಲು ಒಪ್ಪಿಗೆ ನೀಡಿತ್ತು. ಹೊಸ ಪೀಕ್ ಕ್ಯಾಪ್ನಲ್ಲಿ ಎಲಾಸ್ಟಿಕ್ ಇರುವುದರಿಂದ ಪೊಲೀಸರ ತಲೆಯಲ್ಲಿ ಸರಿಯಾಗಿ ಕೂರಲಿವೆ. ಇಂದಿನಿಂದ ರಾಜ್ಯದ 1 ಲಕ್ಷ ಪೊಲೀಸ್ ಸಿಬ್ಬಂದಿಗೆ ಹೊಸ ಪೀಕ್ ಕ್ಯಾಪ್ ನೀಡುತ್ತಿದ್ದೇವೆ ಎಂದರು.
ಈ ಸಂದರ್ಭ ಗೃಹಸಚಿವ ಡಾ. ಜಿ. ಪರಮೇಶ್ವರ್, ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.