ಹೊಸದಿಲ್ಲಿ: ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದ ಬಳಿ ಲ್ಯಾಂಡಿಂಗ್ ವೇಳೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪತನವಾಗಿತ್ತು. ಘಟನೆಯಲ್ಲಿ ಅಜಿತ್ ಪವಾರ್ ಸೇರಿ ಐವರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ವಿಮಾನದಲ್ಲಿ ಅಜಿತ್ ಪವಾರ್ ಮತ್ತು ಭದ್ರತಾ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಅವಘಡದಲ್ಲಿ ವಿಮಾನದಲ್ಲಿದ್ದ ಯಾವುದೇ ವ್ಯಕ್ತಿ ಬದುಕುಳಿದಿಲ್ಲ ಎಂದು ತಿಳಿದು ಬಂದಿದೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ಗೆ ಪ್ರಯತ್ನಿಸುತ್ತಿದ್ದಾಗ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಅಜಿತ್ ಪವಾರ್ ಸೇರಿದಂತೆ ಪಿಎಸ್ಒ ಜಾಧವ್, ಓರ್ವ ಸಹಾಯಕ, ಇಬ್ಬರು ಪೈಲೈಟ್ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಖಚಿತಪಡಿಸಿದೆ.
ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಜಿತ್ ಅವರು ಮುಂಬೈಯಿಂದ ಬಾರಾಮತಿಗೆ ಹೊರಟಿದ್ದರು ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಸಂಪರ್ಕಿಸಿ ಬಾರಾಮತಿ ವಿಮಾನ ದುರಂತದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
Comments are closed.