ಉಡುಪಿ: ಲೋಕಾಯುಕ್ತ ಇಲಾಖೆಯಲ್ಲಿ ನವಂಬರ್ 19 ರ ವರೆಗೆ 6123 ದೂರು ಪ್ರಕರಣಗಳ ಪೈಕಿ ಬಹುತೇಕ ದೂರುಗಳನ್ನು ಇತ್ಯರ್ಥಪಡಿಸಿದ್ದು, ಪ್ತಸ್ತುತ 712 ದೂರು ಪ್ರಕರಣಗಳು ಮಾತ್ರ ವಿಚಾರಣೆಗೆ ಬಾಕಿ ಇವೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಡಾ. ವೈ. ಭಾಸ್ಕರ ರಾವ್ ಹೇಳಿದ್ದಾರೆ.
ಅವರು ಇಂದು ಮಣಿಪಾಲದ ರಜತಾದ್ರಿಯ ಜಿಲ್ಲಾ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ದೂರುಗಳ ವಿಚಾರಣೆ ನಡೆಸಿ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ತಾವು ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕ 385 ಪ್ರಕರಣಗಳಲ್ಲಿ , 167 ದಾಳಿ ನಡೆಸಿ, 269 ಪ್ರಕರಣಗಳನ್ನು ದಾಖಲಿಸಿ, ಒಟ್ಟು ರೂ. 261,76,67,145 ಮೊತ್ತದ ಅಕ್ರಮ ಚರ ಮತ್ತು ಸ್ಥಿರಾಸ್ತಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಿದರು.
ಉಡುಪಿಯಲ್ಲಿ ಇಂದು ನಡೆದ ವಿಚಾರಣೆಯಲ್ಲಿ 45 ದೂರುಗಳನ್ನು ಸ್ವೀಕರಿಸಿದ್ದು, ಅವುಗಳಲ್ಲಿ 16 ಪ್ರಕರಣಗಳನ್ನು ಇತ್ಯರ್ಥಗೊಳಿಸಿದ್ದು, ಉಳಿದ ಪ್ರಕರಣಗಳ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಲೋಕಾಯುಕ್ತ ರಿಜಿಸ್ಟ್ರಾರ್ ದೇಶಪಾಂಡೆ, ಉಪ ರಿಜಿಸ್ಟ್ರಾರ್ ಗೋಪಾಲಕೃಷ್ಣ ರೈ, ಜಿಲ್ಲಾಧಿಕಾರಿ ಡಾ. ಆರ್. ವಿಶಾಲ್,ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ. ಕನಗವಲ್ಲಿ , ಪೋಲಿಸ್ ಅಧೀಕ್ಷಕ ರಾಜೇಂದ್ರ ಪ್ರಸಾದ್ ಹಾಗೂ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು