ಬೆಂಗಳೂರು, ನ.26 : ಕೊನೆಗೂ ಕರ್ನಾಟಕ ಸರ್ಕಾರ 2006ರ ಸಿಇಟಿ ಕಾಯ್ದೆಯನ್ನು ತಿದ್ದುಪಡಿ ಮಾಡಿ 2015-16ನೇ ಸಾಲಿನಿಂದ ಜಾರಿಗೆ ತರಲು ಮುಂದಾಗಿದೆ. ವಿದ್ಯಾರ್ಥಿ ಸ್ನೇಹಿಯಾಗಿ ಕಾಯ್ದೆಗೆ ತಿದ್ದುಪಡಿ ತಂದು ಜಾರಿಗೊಳಿಸಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಬುಧವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ್ ಅವರು, ವಿದ್ಯಾರ್ಥಿ ಸ್ನೇಹಿ ತಿದ್ದುಪಡಿಗೆ ಸರ್ಕಾರ ಚಿಂತನೆ ನಡೆಸಿದೆ. ಬೆಳಗಾವಿ ಅಧಿವೇಶನ ಅಥವಾ ಜಂಟಿ ಅಧಿವೇಶನದ ವೇಳೆ ಮಸೂದೆಗೆ ತಿದ್ದುಪಡಿ ತರಲಾಗುವುದು ಎಂದರು.
ಕಾಯ್ದೆಗೆ ತರಬೇಕಾದ ತಿದ್ದುಪಡಿ ಬಗ್ಗೆ ವರದಿ ಸಲ್ಲಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಲಾಗಿದೆ. ಈ ವರದಿ ಬಂದ ನಂತರ ತಿದ್ದುಪಡಿ ವಿಧೇಯಕ ಮಂಡಿಸಿ ಒಪ್ಪಿಗೆ ಪಡೆಯುತ್ತವೆ ಎಂದರು. ವರದಿ ಸಲ್ಲಿಕೆ ವಿಳಂಬವಾದರೆ ಬೆಳಗಾವಿ ಅಧಿವೇಶನದಲ್ಲಿ ಮಂಡನೆ ಅಸಾಧ್ಯ. ಆದ್ದರಿಂದ ಜನವರಿಯಲ್ಲಿ ನಡೆಯುವ ಜಂಟಿ ಅಧಿವೇಶನ ವೇಳೆ ಮಂಡಿಸಲಾಗುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಅನುಕೂಲಕರ ಶುಲ್ಕ ನಿಗದಿ ಪಡಿಸಿ, ಸರ್ಕಾರಿ ಸೀಟು ಕಡಿಮೆಯಾಗದಂತೆ ತಿದ್ದುಪಡಿ ಮಾಡಲಾಗುವುದು.
ಈ ವಿಚಾರದ ಬಗ್ಗೆ ವಿಪಕ್ಷ ನಾಯಕರ ಜೊತೆ ಚರ್ಚಿಸಿದ್ದೇವೆ. ಅವರು ಗೊಂದಲಗಳ ಬಗ್ಗೆ ಹೇಳಿದ್ದಾರೆ. ಅಧಿವೇಶನಲ್ಲಿ ಮಸೂದೆ ಮಂಡಿಸಿದಾಗ ಸಲಹೆ ಕೊಡಲು ಮುಕ್ತ ಅವಕಾಶವಿದೆ. ಎಲ್ಲವನ್ನು ಪರಿಗಣಿಸಿ ತಿದ್ದುಪಡಿ ಮಾಡಿ ಮುಂದಿನ ಶೈಕ್ಷಣಿಕ ವರ್ಷದಿಂದ ಕಾಯ್ದೆಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದರು. ಕೆಲವು ದಿನಗಳ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮತ್ತು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು, ವಿವಿಧ ಕಾಲೇಜು ವಿದ್ಯಾರ್ಥಿಗಳು, ಪೋಷಕರೊಂದಿಗೆ ಸಭೆ ನಡೆಸಿ ಕಾಯ್ದೆ ಜಾರಿ ಬಗ್ಗೆ ಚರ್ಚೆ ನಡೆಸಿದ್ದರು. 2006ರ ಕಾಯ್ದೆಯನ್ನು ಜಾರಿಗೆ ತರುವುದಾದದರೆ ಕರ್ನಾಟಕ ಖಾಸಗಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ)ಯನ್ನು ರದ್ದುಮಾಡಿ ಎಂದು ವಿದ್ಯಾರ್ಥಿ ಸಂಘಟನೆಗಳ ಪ್ರಮುಖರು ಸರ್ಕಾರವನ್ನು ಒತ್ತಾಯಿಸಿದ್ದರ