ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿರುವ ಪೊಲೀಸ್ ವಾಹನಗಳಿಗೆ ಪ್ರಥಮ ಚಿಕಿತ್ಸೆ ಕಿಟ್ ವಿತರಣೆ ಶನಿವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಆವರಣದಲ್ಲಿ ನಡೆಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಸ್.ಡಿ. ಶರಣಪ್ಪ ಕಿಟ್ ವಿತರಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆ ಯಲ್ಲಿ ಒಟ್ಟು 156 ಪೊಲೀಸ್ ಇಲಾಖೆಗೆ ಸೇರಿದ ವಾಹನಗಳು ಇವೆ. ಇವುಗಳಲ್ಲಿ 80 ಚತುಷ್ಚಕ್ರ ವಾಹನಗಳಿಗೆ ಕಿಟ್ ವಿತರಿಸ ಲಾಗಿದೆ. ಕಿಟ್ ಬಳಸುವ ಬಗ್ಗೆ ಸಂಬಂಧ ಪಟ್ಟವರಿಗೆ ತರಬೇತಿಯನ್ನು ನೀಡಲಾಗುತ್ತದೆ ಎಂದರು.
ಅಪಘಾತ ನಡೆಯುವ ಸಂದರ್ಭದಲ್ಲಿ ಪೊಲೀಸ್ ವಾಹನಗಳು ತಕ್ಷಣ ಸ್ಥಳಕ್ಕೆ ತೆರಳುತ್ತವೆ. ಈ ಸಂದರ್ಭ ಗಾಯಾಳು ಗಳಿಗೆ ತಕ್ಷಣಕ್ಕೆ ಪ್ರಥಮ ಚಿಕಿತ್ಸೆ ಕೊಡಿಸುವ ನಿಟ್ಟಿನಲ್ಲಿ ಗಾಯಾಳುಗಳನ್ನು ಉಪಚರಿಸಿ ಹೆಚ್ಚಿನ ರಕ್ತಸ್ರಾವವಾಗದಂತೆ ತಡೆಗಟ್ಟಲು ಇದು ಸಹಕಾರಿಯಾಗಲಿದೆ ಎಂದು ಅವರು ವಿವರಿಸಿದರು.
ಖಾಸಗಿ ವಾಹನಗಳಲ್ಲೂ ಕಡ್ಡಾಯ ವಾಗಿ ಪ್ರಥಮ ಚಿಕಿತ್ಸೆ ಕಿಟ್ನ್ನು ಹೊಂದಬೇಕು. ಇದನ್ನು ಬಳಸಲು ಸೂಕ್ತ ಮಾಹಿತಿ ಇಲ್ಲದವರು ಸಮೀಪದ ಆಸ್ಪತ್ರೆಗೆ ತೆರಳಿ ಅಲ್ಲಿನ ವೈದ್ಯರಿಂದ ಮಾಹಿತಿ ಪಡೆದುಕೊಳ್ಳಬಹುದು. ಅಲ್ಲದೆ ವಾಹನ ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಿ ಚಾಲನೆ ಮಾಡಬೇಕು ಎಂದು ಅವರು ತಿಳಿಸಿದರು.
ಬೆಳ್ತಂಗಡಿ ಸಮೀಪದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಜಾಗದ ವಿಚಾರವಾಗಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಮತ್ತು ಎಸ್ಪಿ ಅವರನ್ನು ಅಮಾನತುಗೊಳಿಸಿ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿತ್ತು. ಆದರೆ ಇದಕ್ಕೆ ನಾವು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಾಲಯಕ್ಕೆ ವಸ್ತುಸ್ಥಿತಿಯ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ಹಿನ್ನೆಲೆಯಲ್ಲಿ ಅಮಾನತು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ ಎಂದು ಡಾ.ಎಸ್.ಡಿ.ಶರಣಪ್ಪ ತಿಳಿಸಿದರು.