ಮಂಗಳೂರು,ಜ.03 : ರಾಜ್ಯದ ಮಹಾನಗರ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸುಮಾರು 35 ಸಾವಿರ ಪೌರ ಕಾರ್ಮಿಕರನ್ನು ಮುಂದಿನ ಒಂದು ತಿಂಗಳೊಳಗೆ ಕಾಯಂಗೊಳಿಸಲಾಗುವುದು ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ನಾರಾಯಣ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ದ.ಕ. ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ವಿವಿಧ ಸಮಸ್ಯೆಗಳ ಬಗ್ಗೆ ನಡೆದ ಚರ್ಚೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಸುಮಾರು 10ರಿಂದ 20 ವರ್ಷಗಳಿಂದ ಹಲವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ಪದ್ಧತಿಯನ್ನು ಜಾರಿಗೆ ತರುವ ಉದ್ದೇಶದಿಂದ ರಾಜ್ಯ ಹೈಕೋರ್ಟ್ ನಿರ್ದೇಶನದಂತೆ ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ನಿರ್ಧರಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸರಕಾರ ಈ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟವಾಗಲಿದೆ ಎಂದು ಅವರು ತಿಳಿಸಿದರು.
ಸರಕಾರದ ಸ್ಪಷ್ಟ ಆದೇಶ ನೀಡುವ ವರೆಗೆ ಸರಕಾರಿ ಕಚೇರಿ ಮತ್ತು ನಿಗಮ ಮಂಡಳಿಗಳಲ್ಲಿ ಯಾವುದೇ ಗುತ್ತಿಗೆ ಆಧಾರದ ಮೇಲೆ ಟೆಂಡರ್ ಮೂಲಕ ನೇಮಿಸುವ ಪದ್ಧತಿ ಕೈಬಿಡುವಂತೆ ಆಯೋಗ ಸೂಚಿಸಿದೆ ಎಂದು ನಾರಾಯಣ ತಿಳಿಸಿದರು.
ರಾಜ್ಯ ಸರಕಾರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಲ್ಯಾಣಕ್ಕಾಗಿ 16 ಸಾವಿರ ಕೋಟಿ ರೂ. ಬಜೆಟ್ನ್ನು ಸರಕಾರ ಪ್ರತಿ ವರ್ಷ ನೀಡುತ್ತಿದೆ. ಆದರೆ ಇದರಲ್ಲಿ ಪೌರ ಕಾರ್ಮಿಕರ ಕಲ್ಯಾಣಕ್ಕೆ ನಯಾ ಪೈಸೆ ಬಳಕೆಯಾಗುತ್ತಿಲ್ಲ. ಹಿಂದುಳಿದ ವರ್ಗಗಳ ಶ್ರೀಮಂತ ವ್ಯಕ್ತಿಗಳೇ ಇದರ ಫಲಾನುಭವಿಗಳಾಗುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಕೇಂದ್ರ ಸರಕಾರದಿಂದ ರಾಜ್ಯ ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕೆ 2012- 13ನೇ ಸಾಲಿಗೆ ರಾಜ್ಯಕ್ಕೆ 300 ಕೋಟಿ ರೂ. ಅನುದಾನ ನೀಡಿತ್ತು. ಆದರೆ ಅದರಲ್ಲಿ 280 ಕೋಟಿ ರೂ. ಬಳಕೆಯಾಗದೆ ವಾಪಸ್ ಹೋಗಿದೆ. ಇದು ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಆಗಿದೆ. ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರೆಮ ಕೈಗೊಳ್ಳುವಂತೆ ಸರಕಾರಕ್ಕೆ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದರು.
ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಂಡಿರುವ ಗುತ್ತಿಗೆದಾರರು ಪೌರ ಕಾರ್ಮಿಕರಿಗೆ ನೀಡಬೇಕಾಗಿರುವ ಸವಲತ್ತುಗಳನ್ನು ನೀಡದೆ ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ತಿಳಿಸಿದರು. ಪೌರ ಕಾರ್ಮಿಕರಿಗೆ ಒಂದು ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ, ಜಿಪಂ ಸಿಇಒ ತುಳಸಿ ಮದ್ದಿನೇನಿ, ಮಹಾನಗರ ಪಾಲಿಕೆ ಆಯುಕ್ತೆ ಹೆಫ್ಸಿಬಾ ರಾಣಿ ಕೊರ್ಲಪತಿ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.