ಮಂಗಳೂರು, ಜ.09: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವನ್ನು ಅಭಿವೃದ್ಧಿಪಡಿಸುವುದಕ್ಕಾಗಿ ಶೀಘ್ರದಲ್ಲೇ ದುಬೈಯಲ್ಲಿ ಬಂಡವಾಳ ಹೂಡಿಕೆದಾರರ ಸಭೆ ಕರೆಯಲು ನಿರ್ಧರಿಸಲಾಗಿದೆ ಎಂದು ಶಾಸಕ ಬಿ.ಎ.ಮೊಯ್ದಿನ್ ಬಾವ ತಿಳಿಸಿದ್ದಾರೆ.
ಗುರುವಾರ ತನ್ನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಮಾನ ನಿಲ್ದಾಣದ ವಿಸ್ತರಣೆಗೆ 189 ಎಕರೆ ಭೂಮಿಯ ಅಗತ್ಯವಿದ್ದು, 1,100 ಕೋಟಿ ರೂ.ಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಇತ್ತೀಚೆಗೆ ಬೆಂಗಳೂರಿನಲ್ಲಿ ಜಿಲ್ಲೆಯ ಇತರ ಸಚಿವರು, ಶಾಸಕರು, ಅಧಿಕಾರಿಗಳ ಸಭೆಯನ್ನು ಮೂಲ ಸೌಲಭ್ಯ ಅಭಿವೃದ್ಧಿ, ಹಜ್-ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಆರ್.ರೋಶನ್ ಬೇಗ್ ಸಮ್ಮುಖ ನಡೆಸಿದ್ದು, ಗಲ್ಫ್ ರಾಷ್ಟ್ರಗಳ ಉದ್ಯಮಿಗಳ, ಬಂಡವಾಳ ಹೂಡಿಕೆದಾರರ ಸಭೆಯನ್ನು ದುಬೈಯಲ್ಲಿ ಸಂಘಟಿಸಿ ಸಂಪನ್ಮೂಲ ಕ್ರೋಡೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ನಿರ್ಧಾರಕ್ಕೆ ಬರಲಾಗಿದೆ. ಅದರಂತೆ ತಾನು ಈ ಕುರಿತು ತೀವ್ರ ಮುತುವರ್ಜಿ ವಹಿಸುತ್ತಿದ್ದೇನೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಪೊ ರೇಟರ್ ಮುಹಮ್ಮದ್ ಕುಂಜತ್ತಬೈಲ್, ಡಿಸಿಸಿ ಕಾರ್ಯದರ್ಶಿ ಟಿ.ಕೆ.ಸುಧೀರ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಮುಖಂಡ ಹರಿಶ್ಚಂದ್ರ, ಕಾವೂರು ಸರಕಾರಿ ಕಾಲೇಜಿನ ಪ್ರಾಂಶುಪಾಲೆ ಡಾ.ಯು.ತಾರಾ, ಕುದುರೆಮುಖ ಕಂಪೆನಿಯ ಗಜಾನನ ಪೈ, ಬಾಬು ಮತ್ತಿತರರು ಉಪಸ್ಥಿತರಿದ್ದರು.