ಮಂಗಳೂರು, ಫೆ.07 : ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಹೋಬಳಿ ಪುನರ್ರಚನೆಗೆ ಚಾಲನೆ ನೀಡಲಾಗಿದ್ದು, ದ.ಕ. ಜಿಲ್ಲೆಯಲ್ಲಿ 37 ಹೋಬಳಿಗಳನ್ನು ರಚಿಸಲು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲು ನಿರ್ಧರಿಸಲಾಗಿದೆ. ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.
ಹೋಬಳಿ ಕಚೇರಿಯು ಸರಕಾರಿ ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ಅತ್ಯವಶ್ಯಕವಾಗಿ ಬೇಕಾದ ಕಚೇರಿಯಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಗಮ ಮತ್ತು ತ್ವರಿತವಾಗಿ ಕೆಲಸವಾಗಲು ಜಿಲ್ಲೆಯಲ್ಲಿ ಈಗಿರುವ ಹೋಬಳಿಗಳನ್ನು ವಿಭಜಿಸಿ, ಹೊಸದಾಗಿ ಹೋಬಳಿಗಳನ್ನು ಸೃಜಿಸುವುದು ಅಗತ್ಯವಾಗಿದೆ ಎಂದು ಸಚಿವ ರಮಾನಾಥ ರೈ ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್, ಯುವಜನಸೇವಾ ಮತ್ತು ಕ್ರೀಡಾ ಸಚಿವ ಅಭಯಚಂದ್ರ ಜೈನ್, ಶಾಸಕರಾದ ಮೊಹಿದೀನ್ ಬಾವಾ, ಜೆ.ಆರ್.ಲೋಬೋ, ಎಸ್. ಅಂಗಾರ, ಶಕುಂತಳಾ ಶೆಟ್ಟಿ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಮತ್ತಿತರರು ಉಪಸ್ಥಿತರಿದ್ದರು.