ಮಂಗಳೂರು,ಫೆ .20 : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇತ್ತೀಚೆಗೆ ಕೇಂದ್ರ ಸರಕಾರ ಏರಿಕೆ ಮಾಡಿರುವುದನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಫೆ. 19 ರಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಅದಕ್ಕೆ ಅನುಗುಣವಾಗಿ ಇಲ್ಲಿ ತೈಲ ಬೆಲೆಯನ್ನು ಕೇಂದ್ರ ಸರಕಾರ ಇಳಿಸಿಲ್ಲ. ಬದಲಾಗಿ ಇಳಿಸಿದ ದರವನ್ನು ಇತ್ತೀಚೆಗೆ ಮತ್ತೆ ಏರಿಸಲಾಗಿದೆ ಎಂದು ಅರ್ಧನಾರೀಶ್ವರ ಅವರು ಆರೋಪಿಸಿ ದರು. ಏರಿಸಿದ ದರವನ್ನು ಕೂಡಲೇ ಇಳಿಸಬೇಕೆಂದು ಆಗ್ರಹಿಸಿದರು. ಕೇಂದ್ರದ ಬಿಜೆಪಿ ಸರಕಾರ ಮತ್ತು ಸಂಬಂಧಪಟ್ಟ ಸಚಿವರ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಬಾಟಲಿಯಲ್ಲಿ ಪೆಟ್ರೋಲ್ ತಂದು ದ್ವಿಚಕ್ರ ವಾಹನದ ಇಂಧನ ಟ್ಯಾಂಕ್ಗೆ ಸುರಿಯುವ ಮೂಲಕ ಪ್ರತಿಭಟಿಸಿದರು.
ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅರ್ಧನಾರೀಶ್ವರ, ಕಾರ್ಯದರ್ಶಿ ರವೀಂದ್ರ ದಾಸ್, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕಾರ್ಪೊರೇಟರ್ ಪ್ರವೀಣ್ಚಂದ್ರ ಆಳ್ವ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.