ಅಮೃತಸರ(ಪಂಜಾಬ್): ಪಂಜಾಬಿನ ಗುರುದಾಸ್ ಪುರದಲ್ಲಿ ದುಷ್ಕರ್ಮಿಯೊಬ್ಬ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುತ್ತಿದ್ದ ನೆಟ್ ಬಾಲ್ ಆಟಗಾರ್ತಿಯ ಮೇಲೆ ಆ್ಯಸಿಡ್ ಎರಚಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿ ಪಂಜಾಬಿನ ಗುರುದಾಸ್ ಪುರದಲ್ಲಿರುವ ತನ್ನ ಮನೆಗೆ ಈ ಯುವತಿ ಹೋಗುತ್ತಿರುವಾಗ ದುಷ್ಕರ್ಮಿಯೊಬ್ಬ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ.
ತೀವ್ರವಾಗಿ ಗಾಯಗೊಂಡಿದ್ದ ಆಕೆಯನ್ನು ಮೊದಲು ಗುರುದಾಸ್ ಪುರದ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಮೃತಸರದ ಗುರುನಾನಕ್ ದೇವ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಭಾವಂತ ಯುವ ಆಟಗಾರ್ತಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾಳೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಯುವತಿಯ ತಾಯಿ, ಕಳೆದ ಹಲವಾರು ದಿನಗಳಿಂದಲೂ ತಮ್ಮ ಮಗಳಿಗೆ ಬೆದರಿಕೆ ಕರೆ ಬರುತ್ತಿದ್ದು, ಈ ಕುರಿತು ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲವೆಂದು ಆರೋಪಿಸಿದ್ದಾರೆ.
ಸದ್ಯ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.