ಮಂಗಳೂರು, ಎ.06 : ದ.ಕ. ಜಿಲ್ಲಾಡಳಿತ, ಜಿಪಂ, ಮಂಗಳೂರು ಮನಪಾ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರವಿವಾರ ನಗರದ ನೇತ್ರಾವತಿ ಸಭಾಂಗಣದಲ್ಲಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 108ನೆ ಜನ್ಮದಿನ ಆಚರಣೆ ಕಾರ್ಯಕ್ರಮವನ್ನು ದ.ಕ.ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಉದ್ಘಾಟಿಸಿದರು
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ. ಜಿ.ಪಂ. ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಸಮಾಜದಲ್ಲಿ ವಿವಿಧ ಸ್ವರೂಪ ಗಳಲ್ಲಿ ಜೀವಂತವಾಗಿರುವ ಅಸ್ಪಶ್ಯತೆಯನ್ನು ಪೂರ್ಣ ಪ್ರಮಾಣದಲ್ಲಿ ನಿವಾರಿಸುವ ಅಗತ್ಯವಿದೆ ಎಂದು ಹೇಳಿದರು.
ಮುಖ್ಯ ಸಂಪನ್ಮೂಲ ವ್ಯಕ್ತಿ ವೈ.ಶಿವರಾಮಯ್ಯ ಮಾತನಾಡಿ, ಜಗಜೀವನ ರಾಂರನ್ನು ದಲಿತ ನಾಯಕ ಎಂದು ಕರೆದುಕೊಳ್ಳುವುದು ಚಾರಿತ್ರಿಕ ಪ್ರಮಾದ. ದೇಶ ಆಹಾರ ಬಿಕ್ಕಟ್ಟಿನಲ್ಲಿರುವ ಸಂದರ್ಭ ಹಸಿರು ಕ್ರಾಂತಿ ಮೂಲಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದ ಅಪ್ರತಿಮ ರಾಷ್ಟ್ರ ಭಕ್ತರಾಗಿದ್ದ ಜಗಜೀವನ ರಾಂ, ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಬಲ ಪ್ರತಿಪಾದಕ ಎಂದರು.
ಜಿ.ಪಂ. ಸಿಇಒ ಪಿ.ಐ.ವಿದ್ಯಾ, ಜಿ.ಪಂ. ಸ್ಥಾಯಿ ಸಮಿತಿಯ ಅಧ್ಯಕ್ಷೆ ಮೀನಾಕ್ಷಿ ಮಂಜುನಾಥ್ ಅತಿಥಿಗಳಾಗಿದ್ದರು. ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಡಾ.ಜಿ. ಸಂತೋಷ್ ಕುಮಾರ್ ಸ್ವಾಗತಿಸಿದರು. ರೋಹಿತ್ ಉಳ್ಳಾಲ್ ನಿರೂಪಿಸಿದರು.