ಮಂಗಳೂರು, ಮೇ 14: ದಕ್ಷಿಣ ಕನ್ನಡ ಜಿಲ್ಲೆಯ 227 ಗ್ರಾಮ ಪಂಚಾಯತ್ಗಳಿಗೆ ಮೇ 29ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೇ 16ರೊಳಗೆ ಶಸ್ತ್ರಾಸ್ತ್ರಠೇವಣಿ ಇರಿಸಲು ದ.ಕ.ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಆದೇಶಿಸಿದ್ದಾರೆ.
ಜಿಲ್ಲೆಯ ಪ್ರಸಕ್ತ ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಶಾಂತಿ ಸುರಕ್ಷತೆಯ ಹಿತ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಬೆಳೆ ರಕ್ಷಣೆಗಾಗಿ ಮತ್ತು ಆತ್ಮರಕ್ಷಣೆಗಾಗಿ ಮಂಜೂರು ಮಾಡಲಾಗಿದ್ದ ಶಸ್ತ್ರಾಸ್ತ್ರಗಳನ್ನು ಮರಳಿಸಬೇಕು. ಆತ್ಮರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎನ್ಪಿಬಿ ರಿವಾಲ್ವರ್ ಮತ್ತು ಪಿಸ್ತೂಲ್ಗಳನ್ನು ತಕ್ಷಣ ಸಮೀಪದ ಪೊಲೀಸ್ ಠಾಣೆ ಅಥವಾ ನಮೂನೆ 14ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಠೇವಣಿ ಇಡಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಚುನಾವಣಾ ಫಲಿತಾಂಶ ಘೋಷಣೆಯಾದ ಒಂದು ವಾರದ ಬಳಿಕ (ಜೂ.13) ಠೇವಣಿ ಇರಿಸಲಾದ ಶಸ್ತ್ರಾಸ್ತ್ರಗಳನ್ನು ಮರಳಿ ಪಡೆಯಬಹುದಾಗಿದೆ. ಈ ಆದೇಶವು ಮಂಗಳೂರು ಮಹಾನಗರ ಪಾಲಿಕೆ, ಉಳ್ಳಾಲ ನಗರ ಸಭೆ, ಮೂಡುಬಿದಿರೆ, ಬಂಟ್ವಾಳ, ಪುತ್ತೂರು ಪುರಸಭೆ, ಮುಲ್ಕಿ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಚುನಾವಣೆ ನಡೆಯದ ವಿಟ್ಲ ಕಸಬ, ಕೋಟೆಕಾರ್, ವೇಣೂರು, ಅರಂಬೋಡಿ, ಪುದು ಗ್ರಾಪಂ ವ್ಯಾಪ್ತಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.