ಮಂಗಳೂರು, ಜೂ.28: ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಶನಿವಾರ ನಗರದ ಕದ್ರಿ ಗೋರಕ್ಷನಾಥ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಅರಣ್ಯ ಹಾಗೂ ಪರಿಸರ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಉದ್ಘಾಟನೆ ನೆರವೇರಿಸಿ, ಪರಿಸರ ಸಂರಕ್ಷಣೆಯಲ್ಲಿ ನಾಗರಿಕರಾಗಿ ಪರಿಸರವನ್ನು ಕಾಪಾಡುವ ಜವಾಬ್ದಾರಿಯನ್ನು ವಹಿಸಬೇಕು ಎಂದರು.
ಪರಿಸರ ದಿನಾಚರಣೆ ಕಾರ್ಯಕ್ರಮ ಪ್ರಯುಕ್ತ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಗೈಡ್ ವಿದ್ಯಾರ್ಥಿನಿಯರಿಗೆ ಸಾಂಕೇತಿಕವಾಗಿ ಗಿಡ ವಿತರಿಸಲಾಯಿತು. ಅಲ್ಲದೆ, ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬದಲಾಗಿ ಸೆಣಬು ಬ್ಯಾಗ್ ಬಳಸುವಂತಾಗಲು ಸಾಂಕೇತಿಕವಾಗಿ ಸೆಣಬು ಬ್ಯಾಗ್ ವಿತರಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಪೂಂಜ ಪರಿಸರ ಸಂರಕ್ಷಣೆ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕೆನರಾ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎಂ.ಜೆ.ಶೆಟ್ಟಿ, ಕೆನರಾ ಚೇಂಬರ್ ಅಧ್ಯಕ್ಷ ನಿಗಮ್ ವಸಾನಿ, ಪ್ಲಾಸ್ಟಿಕ್ ಉತ್ಪಾದಕರ ಸಂಘದ ಸಂಘದ ಅಧ್ಯಕ್ಷ ನಝೀರ್, ಪರಿಸರವಾದಿ ಲಕ್ಷ್ಮಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ರಾಜ್ಯ ಮಾಲಿನ್ಯ ಮಂಡಳಿಯ ಸದಸ್ಯ ಕಾರ್ಯದರ್ಶಿ ವಿಜಯ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ್ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.