ಮಂಗಳೂರು,ಜುಲೈ.06 : ಜಿಲ್ಲೆಯ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಒಂದು ವಾರದೊಳಗೆ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಸಭೆ ನಡೆಸಿ ಸಾಂಕ್ರಾಮಿಕ ರೋಗ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ, ಸರಕಾರೇತರ ಸಂಸ್ಥೆ, ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಈ ಬಗ್ಗೆ ಅಭಿಯಾನ ನಡೆಸಬೇಕು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರವಿವಾರ ನಡೆದ ಸಾಂಕ್ರಾಮಿಕ ರೋಗ ನಿರ್ಮೂಲನೆ ಕಾರ್ಯಾಚರಣೆ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಹುದ್ದೆ ಖಾಲಿಯಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಾತ್ಕಾಲಿಕ ನೆಲೆಯಲ್ಲಿ 7,500 ರೂ. ವೇತನ ನೀಡಿ ಲ್ಯಾಬ್ ಟೆಕ್ನಿಶಿಯನ್ ನೇಮಕ ಮಾಡಿಕೊಳ್ಳಲಾಗುವುದು ಎಂದ ಖಾದರ್, ಶುಚಿತ್ವ ಕಾಪಾಡದ ಅಂಗಡಿ ಮತ್ತು ಹೋಟೆಲ್ಗಳಿಗೆ ಸ್ಥಳೀಯಾಡಳಿತ ಹಾಗೂ ಪಾಲಿಕೆ ದಾಳಿ ನಡೆಸಿ ಪರವಾನಗಿ ರದ್ದುಗೊಳಿಸಬೇಕು ಎಂದು ಸೂಚಿಸಿದ ಖಾದರ್, ಕನಿಷ್ಠ ಪಕ್ಷ 1 ಪರವಾನಗಿ ರದ್ದುಪಡಿಸಿದರೆ ಇತರರು ಜಾಗೃತಗೊಳ್ಳುತ್ತಾರೆ ಎಂದು ಅಧಿಕಾರಿಗಳಿಗೆ ಕಿವಿಮಾತಿತ್ತರು.
ಮೇಯರ್ ಜೆಸಿಂತಾ ವಿಜಯ ಆಲ್ಪ್ರೆಡ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ಉಪಸ್ಥಿತರಿದ್ದರು.