ಮಂಗಳೂರು, ಜು. 8: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಆರೋಗ್ಯ ಕಚೇರಿ ಬಳಿ ಸಾಂಕ್ರಾಮಿಕ ರೋಗ ಪೀಡಿತರ ಅಣಕು ಪ್ರದರ್ಶನ ನಡೆಯಿತು.
ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಸಮಿತಿಯ ಜಿಲ್ಲಾಧ್ಯಕ್ಷ ದಯಾನಂದ ಶೆಟ್ಟಿ, ಡೆಂಗ್, ಮಲೇರಿಯಾ ಮೊದಲಾದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದರು. ದ.ಕ. ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಬಂಟ್ವಾಳಗಳಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಿನ ಜನರಿಗೆ ಬಾಧಿಸಿದೆ. ಜಿಲ್ಲೆಯಲ್ಲಿ ಭೀಕರವಾಗಿ ಕಾಡುತ್ತಿರುವ ಡೆಂಗ್, ಮಲೇರಿಯಾ ಸಹಿತ ಇತರ ಸಾಂಕ್ರಾಮಿಕ ರೋಗಗಳ ಬಗ್ಗೆ ರಾಜ್ಯದ ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖೆ ಗಂಭೀರವಾಗಿ ಯೋಚಿಸಬೇಕೆಂದು ಅವರು ಹೇಳಿದರು.
ಸಮಿತಿಯ ಉಪಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಮಾತನಾಡಿ, ಜಿಲ್ಲೆಯಲ್ಲಿ ಅತೀ ವೇಗದಲ್ಲಿ ಜನರನ್ನು ಕಾಡುತ್ತಿರುವ ಸಾಂಕ್ರಾಮಿಕ ರೋಗಗಳ ಬಗ್ಗೆ ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಚರ್ಚೆಯಾಗಬೇಕಾಗಿತ್ತು. ಇಷ್ಟು ಗಂಭೀರ ಸಮಸ್ಯೆಯ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗದಿರುವುದು ದುರದೃಷ್ಟಕರ. ಇದು ನಮ್ಮ ಜಿಲ್ಲೆಯ ಜನಪ್ರತಿನಿಧಿಗಳ ಕಾಳಜಿಯನ್ನು ತೋರಿಸುತ್ತದೆ ಎಂದರು.
ಸಮಿತಿಯ ಕಾರ್ಯದರ್ಶಿ ಸಂತೋಷ್ ಬಜಾಲ್, ಕೋಶಾಧಿಕಾರಿ ಜೀವನ್ರಾಜ್ ಕುತ್ತಾರ್, ರಫೀಕ್ ಹರೇಕಳ, ನವೀನ್ ಕೊಂಚಾಡಿ, ಅಜ್ಮಲ್ ಅಹ್ಮದ್, ಎ.ಬಿ.ನೌಷಾದ್ ಬೆಂಗ್ರೆ, ಸುನೀಲ್ ತೇವುಲ, ಎಸ್ಎಫ್ಐ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್ ಮೊದಲಾದವರು ಉಪಸ್ಥಿತರಿದ್ದರು.