ಮಂಗಳೂರು, ಜು.23: ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಿಂದೂ ಸಂಘಟನೆಗಳ ವಿರುದ್ಧ ಮಾಡಿರುವ ಆರೋಪವನ್ನು ಸಾಕ್ಷಿ ಸಹಿತ ಸಾಬೀತುಪಡಿಸಬೇಕು, ಇಲ್ಲವಾದರೆ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಹಿಂದೂ ಜಾಗರಣ ವೇದಿಕೆ ರಾಜ್ಯ ಸಂಚಾಲಕ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದ್ದಾರೆ.
ಬುಧವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇರಳಕಟ್ಟೆ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳು ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ ಹಾಗೂ ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ಪ್ರಕರಣವನ್ನು ಹಿಂದೂ ಸಂಘಟನೆಗಳ ನಾಯಕರು ಮುಚ್ಚಿ ಹಾಕಿದ್ದಾರೆ ಎಂಬ ಆರೋಪದ ಬಗ್ಗೆ ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದ ಅವರು, ನ್ಯಾಯ ಸಿಗುವವರೆಗೆ ನಿರಂತರ ಹೋರಾಟ ನಡೆಸುವುದು ಮಾತ್ರವಲ್ಲದೆ ಸಚಿವರ ಮನೆಯೆದುರು ಧರಣಿ ಕೂರಲಾಗುವುದು ಎಂದರು.
ಹಿಂಜಾವೇದಿಕೆಯ ಪ್ರಮುಖರಾದ ಕಿಶೋರ್ಕುಮಾರ್, ಅಮಿತ್ ಯೆಯ್ಯಾಡಿ, ಸುಭಾಶ್ ಪಡೀಲ್, ಪ್ರಕಾಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.