ಮಂಗಳೂರು, ಜ.25: ಬ್ಯಾರಿ ಸಾಹಿತ್ಯ ಅಕಾಡಮಿಯು ಬ್ಯಾರಿ ಭಾಷೆಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಶೀಘ್ರದಲ್ಲೇ “ಬ್ಯಾರಿ ವ್ಯಾಕರಣ” ಕೃತಿ ರಚನೆಗೆ ಚಾಲನೆ ನೀಡಲಾಗುವುದು ಮತ್ತು ಬ್ಯಾರಿ ಜನಾಂಗದ ಗಣ್ಯ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಪ್ರಕಟಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಅಗಲಿದ ಪ್ರಮುಖರ ಜೀವನ ಚರಿತ್ರೆಯನ್ನೂ ಸೇರಿಸಿಕೊಳ್ಳಲಾಗುವುದು ಎಂದುಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಹೇಳಿದರು.
ರಾಜ್ಯದ ವಿವಿಧ ಅಕಾಡಮಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ನಗರದ ಹೊರವಲಯದ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ ಶುಕ್ರವಾರ ನಡೆದ “ಸಂಗಮ ಸಂಭ್ರಮ 2015 “ರ “ಪೆರ್ನಾಲ್ ಸಂದೋಲ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾಡಿನ ವಿವಿಧ ಧರ್ಮೀಯರ ಹಬ್ಬಗಳನ್ನು ಎಲ್ಲರೂ ಜತೆಗೂಡಿ ಸಂಭ್ರಮಿಸುವ ಮೂಲಕ ಐಕ್ಯತೆಯನ್ನು ಸಾಧಿಸಲು ಸಾಧ್ಯವಿದೆ. ಅಲ್ಲದೆ ಇದರಿಂದ ಸರ್ವ ಜನರ ಮಧ್ಯೆ ಸಾಮರಸ್ಯ ಮೂಡಿಸಲು ಸಾಧ್ಯವಿದೆ. ಸಾಂಸ್ಕೃತಿಕ ವಿನಿಮಯ ಇಂದಿನ ಕಾಲಕ್ಕೆ ಅತ್ಯಗತ್ಯವಾಗಿದೆ ಎಂದು ಬಿ.ಎ.ಮುಹಮ್ಮದ್ ಹನೀಫ್ ತಿಳಿಸಿದರು.
ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ “ಮಾನವ ಸಮುದಾಯ ಮತ್ತು ಸ್ವಸ್ಥ ಸಮಾಜ” ಎಂಬ ವಿಷಯದಲ್ಲಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಕೆ.ಎ. ದಯಾನಂದ “ಪೆರ್ನಾಲ್ ಸಂದೋಲ’ ವೀಡಿಯೋ ಆಲ್ಬಂ ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಮನ್ವಯಾಧಿಕಾರಿ ಕಾ.ತ.ಚಿಕ್ಕಣ್ಣ, ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಷಾ, ಹಿರಿಯ ವಿದ್ವಾಂಸ ಪ್ರೊ. ಎ.ವಿ. ನಾವಡ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾಧಿಕಾರಿ ಉಸ್ಮಾನ್ ಎ., ಅಬುದಾಬಿ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಭಾಗವಹಿಸಿದ್ದರು.
ಕೊಂಕಣಿ ಅಕಾಡಮಿ ಅಧ್ಯಕ್ಷ ರಾಯ್ ಕ್ಯಾಸ್ಟಲಿನೊ, ತುಳು ಅಕಾಡಮಿಯ ಅಧ್ಯಕ್ಷೆ ಎಂ.ಜಾನಕಿ ಬ್ರಹ್ಮಾವರ, ಲಲಿತಾ ಕಲಾ ಅಕಾಡಮಿಯ ಅಧ್ಯಕ್ಷ ಎಂ.ಎಸ್.ಮೂರ್ತಿ, ಕೊಂಕಣಿ ಅಕಾಡಮಿಯ ರಿಜಿಸ್ಟ್ರಾರ್ ಡಾ. ಬಿ. ದೇವದಾಸ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಕಾಡಮಿಯ ಸದಸ್ಯ ಅಬ್ಬಾಸ್ ಕಿರುಗುಂದ ಸ್ವಾಗತಿಸಿದರು. ರಿಜಿಸ್ಟ್ರಾರ್ ಉಮರಬ್ಬ ಪ್ರಾಸ್ತಾವಿಸಿದರು. ಸದಸ್ಯ ಅಬ್ದುಲ್ ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.