ಮಂಗಳೂರು, ಆ.26: ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ನಲ್ಲಿ ಸರ್ವರ್ ದೋಷದ ಕಾರಣ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅರ್ಜಿಯನ್ನು ಸಲ್ಲಿಸಲು ಅಸಾಧ್ಯವಾಗಿದೆ ಎಂದು ಆರೋಪಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(ಸಿಎಫ್ಐ)ದಿಂದ ಮಂಗಳವಾರ ನಗರದಲ್ಲಿ ಧರಣಿ ನಡೆಯಿತು. ನಗರದ ಪಿವಿಎಸ್ ಸರ್ಕಲ್ನಿಂದ ಲಾಲ್ಭಾಗ್ನಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಕಚೇರಿಯವರೆಗೆ ಜಾಥಾದಲ್ಲಿ ತೆರಳಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಇದೇ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪೊಲೀಸ್ ಅಧಿಕಾರಿಗಳು ಮತ್ತು ವಿದ್ಯಾರ್ಥಿ ಮುಖಂಡರ ನಡುವೆ ಮಾತಿನ ಚಕಮಕಿಯೂ ನಡೆಯಿತು. ಪ್ರತಿಭಟನಾಕಾರರ ಬೇಡಿಕೆಯಂತೆ ಸ್ಥಳಕ್ಕೆ ಆಗಮಿಸಿದ ಪ್ರಭಾರ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಉಸ್ಮಾನ್ ಎ., ಪೋರ್ಟಲ್ನಲ್ಲಿನ ಸರ್ವರ್ನಲ್ಲಿ ಆಗಿರುವ ಸಮಸ್ಯೆಯ ಬಗ್ಗೆ ಈಗಾಗಲೇ ಇಲಾಖೆಯ ಗಮನಕ್ಕೆ ತರಲಾಗಿದ್ದು, ಮತ್ತೊಮ್ಮೆ ಈ ಬಗ್ಗೆ ಮನವರಿಕೆ ಮಾಡಲಾಗುವುದೆಂದು ತಿಳಿಸಿದರು.
ಧರಣಿಯನ್ನುದ್ದೇಶಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತುಫೈಲ್ ಮಾತನಾಡಿ, ಕೇಂದ್ರ ಸರಕಾರ ಡಿಜಿಟಲ್ ಇಂಡಿಯಾದ ಚಿಂತನೆಯನ್ನು ವಿದ್ಯಾರ್ಥಿಗಳ ಮೇಲೆ ಪ್ರಯೋಗ ಮಾಡುತ್ತಿದೆ. ಕಳೆದ ವರ್ಷ 1 ಕೋಟಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ್ದರೆ, ಈ ವರ್ಷದಲ್ಲಿ ಕೇವಲ 4. 5 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಮುಂದೆ ಹಂತಹಂತವಾಗಿ ವಿದ್ಯಾರ್ಥಿವೇತನವನ್ನು ಕಡಿತ ಗೊಳಿಸುವ ತಂತ್ರ ಇದಾಗಿದೆ. ಇನ್ನು ಅರ್ಜಿ ಸಲ್ಲಿಕೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿಯಿದೆ. ಸರ್ವರ್ನಲ್ಲಿರುವ ದೋಷವನ್ನು ಸರಿಪಡಿಸದಿದ್ದರೆ 85 ಶೇ.ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸಿಗದೆ ಅವರ ಶಿಕ್ಷಣಕ್ಕೆ ಸಮಸ್ಯೆಯಾಗಲಿದೆ ಎಂದು ಹೇಳಿದರು .
ಧರಣಿಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ಮುಹಮ್ಮದ್ ತಪ್ಸಿರ್, ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಶಾಕಿರ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇರ್ಷಾದ್ ಬಜ್ಪೆ, ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಯಾಝ್ ಮಂಜನಾಡಿ, ಉಡುಪಿ ಜಿಲ್ಲಾಧ್ಯಕ್ಷ ಶಫೀಕ್, ಬಂಟ್ವಾಳ ತಾಲೂಕು ಅಧ್ಯಕ್ಷ ನಬೀಲ್ ಅಹ್ಮದ್, ಬೆಳ್ತಂಗಡಿ ತಾಲುಕು ಅಧ್ಯಕ್ಷ ಆಕಿಬ್ ಉಪಸ್ಥಿತರಿದ್ದರು.
ಅರ್ಜಿ ಸಲ್ಲಿಕೆಗೆ ಕಾಲಾವಕಾಶ: ಶಾಸಕ ಲೋಬೊ ಭರವಸೆ
ಧರಣಿ ಸ್ಥಳಕ್ಕೆ ಆಗಮಿಸಿದ ವಿಧಾನಮಂಡಲದ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಮಿತಿಯ ಅಧ್ಯಕ್ಷ ಶಾಸಕ ಜೆ.ಆರ್. ಲೋಬೊ ಅವರು ಧರಣಿ ನಿರತರಿಂದ ಮನವಿ ಸ್ವೀಕರಿಸಿ ಮಾತನಾಡಿ, ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಕೆಗೆ ಸರ್ವರ್ನಲ್ಲಿ ಆಗಿರುವ ದೋಷದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆಗೆ ಮತ್ತಷ್ಟು ಕಾಲಾವಕಾಶ ನೀಡುವ ಬಗ್ಗೆ ಅಲ್ಪಸಂಖ್ಯಾತ ಇಲಾಖೆಯ ನಿರ್ದೇಶಕರೊಂದಿಗೆ ಮಾತುಕತೆ ನಡೆಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗುವುದೆಂದು ಭರವಸೆ ನೀಡಿದರು.