ಮಂಗಳೂರು,ಸೆ.03: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಐಎನ್ಟಿಯುಸಿಯ ರಾಜ್ಯ ಕಾರ್ಯ ದರ್ಶಿ ಸದಾಶಿವ ಶೆಟ್ಟಿ ಮಾತನಾಡಿ, ಕೇಂದ್ರದ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕಾರ್ಮಿಕರ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ. ಇದರಿಂದ ಶ್ರಮಿಕ ವರ್ಗದವರಿಗೆ ಭಾರಿ ಸಮಸ್ಯೆಯಾಗುತ್ತಿದೆ. ಇದನ್ನು ಕೇಂದ್ರ ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಅಲ್ಲದೆ, ಕಾರ್ಮಿಕರ ಪರವಾದ ನೀತಿಗಳನ್ನು ಜಾರಿಗೆ ತರಬೇಕು ಎಂದು ಹೇಳಿದರು.
‘ಕೇಂದ್ರ ಸರ್ಕಾರ ಕಾರ್ಮಿಕರ ಹಿತ ರಕ್ಷಣೆಗೆ ಹೊಸ ನೀತಿಗಳನ್ನು ತರದಿದ್ದರೂ ಪರವಾಗಿಲ್ಲ. ಈಗಿರುವ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬಾರದು. ಅಲ್ಲದೆ, ಯಾವುದೇ ಕಾಯ್ದೆಗಳನ್ನು ಬದಲಾವಣೆ ಮಾಡಬಾರದು. ಕಾಯ್ದೆಗಳನ್ನು ಬದ ಲಾಯಿಸಲು ಯತ್ನಿಸಿದರೆ ಕೇಂದ್ರ ಸರ್ಕಾ ರದ ವಿರುದ್ಧ ಇದೇ ರೀತಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಎಚ್ಚರಿಸಿದರು.
ದ.ಕ ಜಿಲ್ಲಾ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯ ಸಂಚಾಲಕ, ಸಿಐ ಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿ, ಮುಖಂಡರಾದ ಎಚ್.ವಿ.ರಾವ್, ಮನೋಹರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಬ್ಯಾಂಕ್ ಅಧಿಕಾರಿಗಳ ಸಂಘದ ಕೆ. ರಾಘವ, ಬಿ.ಎಂ. ಮಾಧವ, ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು