ಮಂಗಳೂರು : ಹಲವು ಕೊಲೆ ಹಾಗೂ ಕೊಲೆ ಯತ್ನ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ವಿಕ್ಕಿ @ ಬಾಲಕೃಷ್ಣ ಶೆಟ್ಟಿಯ ಸಹಚರ ಮರೋಳಿ ನಿವಾಸಿ ದೀಕ್ಷಿತ್ ಪೂಜಾರಿ(26) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ
ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಜಾನ್ ಪಿಂಟೋ ಎಂಬವರ ಕೊಲೆ ಪ್ರಕರಣ, ವಿಜಯೇಂದ್ರ ಭಟ್ ಎಂಬವರ ಶೂಟೌಟ್ ಪ್ರಕರಣ, ವಕೀಲರಾದ ಪ್ರಕಾಶ್ ಎಂಬವರನ್ನು ಕಿಡ್ನಾಪ್ ಮಾಡಿದ ಪ್ರಕರಣ, ಛೋಟಾ ಶಕೀಲ್ ನ ಸಹಚರರೊಂದಿಗೆ ಗಣ್ಯ ವ್ಯಕ್ತಿಗಳನ್ನು ಕೊಲೆ ಮಾಡುವ ಸಂಚು ರೂಪಿಸಿದ ಪ್ರಕರಣ, 2014 ನೇ ಇಸವಿಯಲ್ಲಿ ಭೂಗತ ಪಾತಕಿ ರವಿ ಪೂಜಾರಿಯ ಸಹಚರರನ್ನು ಕೊಲೆ ಮಾಡುವ ಸಂಚು ರೂಫಿಸಿದ ಪ್ರಕರಣ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಗಾಪ್ರಸಾದ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಈತ ಭಾಗಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಸ್ತುತ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಈತನನ್ನು ಗುರುವಾರ ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.