ಮಂಗಳೂರು, ಸೆ.19: ಕರಾವಳಿಯಲ್ಲಿ ಸಂಚಲನ ಮೂಡಿಸಿರುವ ಎತ್ತಿನ ಹೊಳೆ ಯೋಜನೆಯನ್ನು ವಿರೋಧಿಸಿ ದ.ಕ. ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘಟನೆ ವತಿಯಿಂದ ಶನಿವಾರ ದ.ಕ. ಜಿಲ್ಲೆಯಲ್ಲಿ ಸರ್ವ ಕಾಲೇಜು ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಮಂಗಳೂರು ತಾಲೂಕು ವ್ಯಾಪ್ತಿಯ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳು ಇಂದು ಬೆಳಗ್ಗೆ ಜ್ಯೋತಿ ವೃತ್ತದಿಂದ ಮೆರವಣಿಗೆ ಮೂಲಕ ದ.ಕ. ಜಿಲ್ಲಾಧಿಕಾರಿ ಕಚೇರಿ ವರೆಗೆ ತೆರಳಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನ ಸಭೆ ನಡೆಸಿದರು.
ಪ್ರತಿಭಟನ ಸಭೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಕಾನೂನು ಸಲಹೆಗಾರ ದಿನಕರ್ ಶೆಟ್ಟಿ ಅವರು ಮಾತನಾಡಿ, ವಿವಾದತ್ಮಾಕವಾಗಿರುವ ನೇತ್ರಾವತಿ ನದಿ ತಿರುವು ಯೋಜನೆ ಅನುಷ್ಠಾನವಾದರೆ ದಕ್ಷಿಣ ಕನ್ನಡ ಜಿಲ್ಲೆ ಕುಡಿಯುವ ನೀರಿನ ಭೀಕರ ಬರ ಅನುಭವಿಸಲಿದೆ, ನೇತ್ರಾವತಿ ನದಿ ನೀರನ್ನೇ ನಂಬಿಕೊಂಡಿರುವ ಜನರು ಭಾರೀ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಎತ್ತಿನಹೊಳೆ ಯೋಜನೆ ಅವ್ಯವಹಾರದ ಗೂಡಾಗಿದ್ದು, ಇದರಿಂದ ಕರಾವಳಿ ಜನರಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿದರು.
ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಜನರು ನೀರಿನ ಅಭಾವನ್ನು ಅನುಭವಿಸುತ್ತಿದ್ದು ಜೀವನ ಸಾಗಿಸುವುದೇ ಕಷ್ಟಕರವಾಗಿದೆ. ಇಂಥ ಸಂದರ್ಭದಲ್ಲಿ ಇಲ್ಲಿ ಸಿಗುವ ನೀರನ್ನು ಕೋಲಾರ ಮತ್ತು ಇತರೆಡೆಗಳಿಗೆ ಸಾಗಿಸುವುದರಿಂದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಳುಕಿಸುವುದರಲ್ಲಿ ಯಾವುದೇ ಸಂಶಯವಿಲ್ಲ.
ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಜಿಲ್ಲೆಯ ರಾಜಕೀಯ ನಾಯಕರು ಸ್ಥಳೀಯರಿಗೆ ದ್ರೋಹ ಬಗೆದಿರುವುದು ದುರಾದೃಷ್ಟಕರ. ಇದು ನಮ್ಮ ಸಂಸದರು, ಶಾಸಕರು ಸೇರಿದಂತೆ ಚುನಾಯಿತ ಪ್ರತಿನಿಧಿಗಳು ನಮಗೆ ಮಾಡುತ್ತಿರುವ ದ್ರೋಹವಾಗಿದೆ ಎಂದು ಆಕ್ರೋಷ ವ್ಯಕ್ತಪಡಿಸಿದರು. ಜಿಲ್ಲೆಯ ಜನರು ಹಾಹಾಕಾರ ಅನುಭವಿಸುವಂತೆ ಮಾಡುವ ಎತ್ತಿನಹೊಳೆಯನ್ನು ಸರ್ಕಾರ ತಕ್ಷಣ ಕೈಬಿಡಬೇಕೆಂದು ದಿನಕರ್ ಶೆಟ್ಟಿ ಆಗ್ರಹಿಸಿದರು.
ಎತ್ತಿನ ಹೊಳೆ ಯೋಜನೆ ವಿರೋಧಿಸಿ ಹಾಗೂ ಈಗಾಗಲೇ ಆರಂಭಗೊಂಡಿರುವ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ, ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕಾರ ನಡೆಸಿ ಇಂದು ಬೆಳಿಗ್ಗೆ ಆಯಾಯ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.