ಮಂಗಳೂರು : ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹತ್ಯೆ ಮಾಡುವ ಸಂಚು ರೂಪಿಸಿದ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎಸ್. ಮುರುಗನ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ..
ಬಂಧಿತನು ಕಾವೂರಿನ ರಾಜು ಯಾನೆ ಜಪಾನ್ ಮಂಗ (24) ಎಂದು ಗುರುತಿಸಲಾಗಿದ್ದು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತರ ಆರೋಪಿಗಳನ್ನು ಶೀಘ್ರದಲ್ಲಿಯೆ ಪತ್ತೆ ಮಾಡಲಾಗುವುದು, ರಾಜು ವಿರುದ್ಧ ಈ ಹಿಂದಿನ 3 ಪ್ರಕರಣಗಳಿದ್ದು, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಬರ್ಕೆ ಠಾಣೆಯಲ್ಲಿ ಕೊಲೆ ಪ್ರಕರಣ, ಕಾಸರಗೋಡಿನಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿವೆ ಎಂದು ತಿಳಿಸಿದರು.
ಮನೆಗಳ್ಳತನ, ಸುಲಿಗೆ ಪ್ರಕರಣ ಸೇರಿದಂತೆ 19 ಪ್ರಕರಣಕ್ಕೆ ಸಂಬಂಧಪಟ್ಟಂತೆ 22 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ 60,91, 500 ರೂ. ವೌಲ್ಯದ ಸೊತ್ತು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಗಣೇಶ ಚತುರ್ಥಿ ಮೆರವಣಿಗೆ ಹಿನ್ನೆಲೆ : ಸೂಕ್ತ ಬಂದೋಬಸ್ತ್
ನಗರದಲ್ಲಿ ಗಣೇಶ ಚತುರ್ಥಿ ಮೆರವಣಿಗೆ ಮತ್ತು ಬಕ್ರೀದ್ ಹಬ್ಬ ಶಾಂತಿಯುತವಾಗಿ ಆಚರಿಸುವ ಹಿನ್ನೆಲೆಯಲ್ಲಿ ವಿವಿಧ ಠಾಣೆಗಳ ವ್ಯಾಪ್ತಿ ಯ 120 ರೌಡಿಶೀಟರ್ಗಳನ್ನು ಠಾಣೆಗೆ ಕರೆಸಿ ಅವರಿಂದ ಬಾಂಡ್ ಮತ್ತು ಶೂರಿಟಿ ತೆಗೆದುಕೊಳ್ಳಲಾಗಿದೆ. ಎಲ್ಲಾ ಠಾಣೆಗಳಲ್ಲಿಯೂ ಶಾಂತಿಸಭೆಗಳನ್ನು ನಡೆಸಲಾಗಿದೆ.
ಅಶಾಂತಿ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಎರಡು ಹಬ್ಬಗಳು ಶಾಂತ ರೀತಿಯಲ್ಲಿ ನಡೆಸಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಕೆ.ಎಂ. ಶಾಂತರಾಜು ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಡಾ. ಸಂಜೀವ್ ಎಂ. ಪಾಟೀಲ್ ಉಪಸ್ಥಿತರಿದ್ದರು.