ಮಂಗಳೂರು : ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರ ಕುತ್ತಿಗೆಯಿಂದ ಸರಕಳ್ಳತನ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಳೆದ 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜೆಪ್ಪು ಮಾರ್ಕೆಟ್, ಕಮರ್ಷಿಯಲ್ ಕಾಂಪ್ಲೆಕ್ಸ್ ಬಳಿಯ ನಿವಾಸಿ ತೌಸಿಫ್ ಸಯ್ಯದ್, (30) ಎಂದು ಹೆಸರಿಸಲಾಗಿದೆ.
ಮಂಗಳೂರು ನಗರದಲ್ಲಿ ನಡೆದ ಸರಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಪತ್ತೆಗೆ ಬಲೆ ಬೀಸಿದ ಸಿಸಿಬಿ ಪೊಲೀಸರು ದಿನಾಂಕ: 29-09-2015 ರಂದು ಪಣಂಬೂರು ಬಳಿ ಕರ್ತವ್ಯದಲ್ಲಿದ್ದ ಸಮಯ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ತೌಸಿಫ್ ಸಯ್ಯದ್ ನನ್ನು ವಶಪಡಿಸಿಕೊಂಡಿದ್ದಾರೆ.
ಈತ ಇನ್ನೋರ್ವ ಆರೋಪಿಯೊಂದಿಗೆ ಸೇರಿ ಈ ಹಿಂದೆ 2013 ನೇ ಇಸವಿಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2013 ನೇ ಇಸವಿಯಲ್ಲಿ ಮುಳಿಹಿತ್ಲು ಫೆರಿ ರೋಡ್ ನಲ್ಲಿ ಶ್ರೀಮತಿ ಉಮಾ ಎಸ್ ಮೆಂಡನ್ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದು ಅವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಕಳ್ಳತನ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಅತ್ತಾವರದ 6 ನೇ ಅಡ್ಡ ರಸ್ತೆಯಲ್ಲಿ ಶ್ರೀಮತಿ ಸುಪ್ರಿತಾ ಎಂಬವರು ನಡೆದುಕೊಂಡು ಹೋಗುತ್ತಿದ್ದ ಸಮಯ ಬೈಕ್ ನಲ್ಲಿ ಬಂದು ದಾರಿ ಕೇಳುವ ನೆಪದಲ್ಲಿ ಮಾತನಾಡಿ ಕುತ್ತಿಗೆಯಿಂದ ಚಿನ್ನದ ಮಾಂಗಲ್ಯ ಸರವನ್ನು ಎಳೆದು ಸುಲಿಗೆ ಮಾಡಿದ್ದನು. ಅಲ್ಲದೇ ಈತನು ಉಳ್ಳಾಲ, ಸುಳ್ಯ ಹಾಗೂ ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಬೈಕ್ ನಲ್ಲಿ ದಾರಿ ಕೇಳುವ ನೆಪದಲ್ಲಿ ಅಮಾಯಕ ಮಹಿಳೆಯರ ಕುತ್ತಿಗೆಯಿಂದ ಸರಕಳ್ಳತನ ಮಾಡಿದ್ದಾನೆ.
ಈತನ ವಿರುದ್ಧ ಒಟ್ಟು 5 ಸರಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಈ ಪ್ರಕರಣಗಳಲ್ಲಿ ಭಾಗಿಯಾದ ಈತನ ಅಣ್ಣ ಸಯ್ಯದ್ ಸಾಹಿಲ್ ಎಂಬಾತನನ್ನು ಈಗಾಗಲೇ ಬಂಧಿಸಿ ಸುಲಿಗೆ ಮಾಡಿದ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತನು ಸರಕಳ್ಳತನ ಮಾಡಿದ ನಂತರ ತಲೆಮರೆಸಿಕೊಂಡಿದ್ದನು. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಪೊಲೀಸ್ ಕಮೀಷನರ್ ಶ್ರೀ.ಎಸ್.ಮುರುಗನ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಶ್ರೀ ಕೆ.ಎಂ. ಶಾಂತರಾಜು, ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ ಡಾ: ಸಂಜೀವ್ ಎಂ. ಪಾಟೀಲ್ ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಇನ್ಸಪೆಕ್ಟರ್ ವೆಲೆಂಟೈನ್ ಡಿಸೋಜ, ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
