ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಅಕ್ಟೋಬರ್ 3ನ್ನು ಬ್ಯಾರಿ ಭಾಷಾ ದಿನವನ್ನಾಗಿ ಘೋಷಿಸಿದ ಹಿನ್ನೆಲೆಯಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಅಶ್ರಯದಲ್ಲಿ ಅಕ್ಟೋಬರ್ 31 ರವರೆಗೆ ಬ್ಯಾರಿ ಭಾಷಾ ಮಾಸಾಚರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮೊದಲ ಹಂತವಾಗಿ ಬ್ಯಾರಿ ಭಾಷಾ ಪ್ರಚಾರ ಅಭಿಯಾನಕ್ಕೆ ಗುರುವಾರ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಚಾಲನೆ ನೀಡಲಾಯಿತು.
ಮಂಗಳೂರು ಮೇಯರ್ ಜೆಸಿಂತಾ ವಿಜಯ ಆಲ್ಫ್ರೆಡ್ ಅವರು ಬ್ಯಾರಿ ಭಾಷಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬ್ಯಾರಿ ಭಾಷಾ ಪ್ರಚಾರ ಅಭಿಯಾನದ ಬ್ಯಾರಿ ಹಾಡುಗಳ ಸಿಡಿಗಳನ್ನು ಚಿಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟದ ಅಧ್ಯಕ್ಷ ಕೆ.ಮುಹಮ್ಮದ್ ಬಿಡುಗಡೆಗೊಳಿಸಿದರು.
ಮಂಗಳೂರು ಆಕಾಶವಾಣಿಯ ಸಹಾಯಕ ನಿರ್ದೇಶಕ ಡಾ.ವಸಂತಕುಮಾರ್ ಪೆರ್ಲ ಅವರು ಅಭಿಯಾನದ ಕರಪತ್ರವನ್ನು ಬಿಡುಗಡೆ ಮಾಡಿದರು.
ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎ. ಮಹಮ್ಮದ್ ಹನೀಫ್, ಅಕಾಡೆಮಿ ರಿಜಿಸ್ಟ್ರಾರ್ ಉಮರಬ್ಬ, ಪುಟ್ಬಾಲ್ ಅಸೋಸಿಯೇಶನ್ ಅಧ್ಯಕ್ಷ ಡಿ.ಎಂ ಅಸ್ಲಾಂ, ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಹಾಗೂ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಇತರ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
















