ಮಂಗಳೂರು, ಅ.28: ದ.ಕ.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದ.ಕ. ಜಿಲ್ಲಾಡಳಿತ, ಜಿಪಂ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾಲ್ಮೀಕಿ ನಾಯಕ ಅಸೋಸಿಯೇಶನ್ ಆಶ್ರಯದೊಂದಿಗೆ ಆಯೋಜಿಸಲಾದ ವಾಲ್ಮೀಕಿ ಜಯಂತಿ ಸಮಾರಂಭವನ್ನು ಮಂಗಳವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯದ ಪ್ರತೀ ಜಿಲ್ಲೆಗಳಲ್ಲೂ ಅಂಬೇಡ್ಕರ್ ಭವನದಂತೆ ವಾಲ್ಮೀಕಿ ಭವನ ನಿರ್ಮಾಣಕ್ಕೂ ಆದ್ಯತೆ ನೀಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಲ್ಮೀಕಿ ಸಮುದಾಯದವರು ಅತ್ಯಲ್ಪವಾಗಿದ್ದರೂ ಸಮುದಾಯಕ್ಕೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಇಲ್ಲಿಯೂ ವಾಲ್ಮೀಕಿ ಭವನ ನಿರ್ಮಾಣಕ್ಕೆ ಪ್ರಯತ್ನಿಸುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಪಾರಂಪರಿಕ ಅರಣ್ಯವಾಸಿಗಳಿಗೆ ಹಕ್ಕುಪತ್ರ ಹಾಗೂ ವಿವಿಧ ಇಲಾಖಾ ಸೌಲಭ್ಯಗಳನ್ನು ವಿತರಿಸಲಾಯಿತು. ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ರಾಮ- ವಾಲ್ಮೀಕಿ ಸಮಕಾಲೀನರು : ಪ್ರೊ.ಸೋಮಣ್ಣ
14 ವರ್ಷಗಳ ವನವಾಸದ ಬಳಿಕ ಶ್ರೀರಾಮನಿಂದ ಪರಿತ್ಯಕ್ತಳಾದ ತುಂಬು ಬಸುರಿ ಸೀತೆಗೆ ತನ್ನ ಆಶ್ರಮದಲ್ಲಿ ಆಶ್ರಯ ನೀಡಿ ಮಕ್ಕಳಾದ ಲವ-ಕುಶರಿಗೆ ವೇದ ಅಧ್ಯಯನ, ಶಸ್ತ್ರ ವಿದ್ಯೆಯನ್ನು ಕಲಿಸಿದವರು ವಾಲ್ಮೀಕಿ. ಹಾಗಾಗಿ ರಾಮಾಯಣವನ್ನು ಬರೆದ ವಾಲ್ಮೀಕಿ ಹಾಗೂ ರಾಮಾಯಣದ ಪ್ರಮುಖ ಪಾತ್ರಧಾರಿ ರಾಮ ಸಮ ಕಾಲೀನರು ಎಂದು.
ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಪ್ರೊ.ಸೋಮಣ್ಣ ವಿಶ್ಲೇಷಿಸಿದರು.
ರಾಮಾಯಣದಲ್ಲಿ ಪುರಾಣವಿದೆ, ಅತಿಮಾನುಷ ಶಕ್ತಿಯಿದೆ, ಇತಿಹಾಸವೂ ಇದೆ. ಆದ್ದರಿಂದ ರಾಮಾಯಣ ವೆಂಬುದು ನಿರಂತರ ಕ್ರಿಯೆ. ಅದನ್ನು ಆಯಾ ಕಾಲಘಟ್ಟಕ್ಕೆ ಬೇಕಾದ ರೀತಿಯಲ್ಲಿ ತಮ್ಮದಾಗಿಸಿಕೊಳ್ಳಬಹುದಾಗಿದೆ ಎಂದವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಜಿಲ್ಲಾ ಎಸ್ಪಿ ಡಾ.ಶರಣಪ್ಪ ಎಸ್.ಡಿ., ಮನಪಾ ಆಯುಕ್ತ ಗೋಪಾಲಕೃಷ್ಣ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ. ಸಂತೋಷ್ ಕುಮಾರ್, ಡಿಎಫ್ಒ ಹನುಮಂತಪ್ಪ, ದ.ಕ. ವಾಲ್ಮೀಕಿ ನಾಯಕ ಅಸೋಸಿಯೇಶನ್ನ ಜಿಲ್ಲಾಧ್ಯಕ್ಷ ಹಾಲೇಶಪ್ಪ, ಜಿಪಂ ಉಪಕಾರ್ಯದರ್ಶಿ ಉಮೇಶ್ ಮೊದಲಾದವರು ಉಪಸ್ಥಿತರಿದ್ದರು.
ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಡಾ.ಬಿ.ಎಸ್. ಹೇಮಲತಾ ಸ್ವಾಗತಿಸಿ ದರು. ಸ್ಮಿತಾ ಶೆಣೈ ಕಾರ್ಯಕ್ರಮ ನಿರೂಪಿಸಿದರು.












