ಮಂಗಳೂರು: ಬಂಟ್ವಾಳ ತಾಲೂಕಿನ ಮಣಿಯಾಲ ಬಳಿಯ ಜಕ್ರಿಬೆಟ್ಟುವಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರೀಶ್ ಪೂಜಾರಿ ಮನೆಗೆ ಆರ್.ಎಸ್.ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಮೊದಲಾದವರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಡಾ. ಪ್ರಭಾಕರ ಭಟ್, ಘಟನೆಯನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ಸಂಘ ಪರಿವಾರದ ವತಿಯಿಂದ ಮೃತರ ಕುಟುಂಬಕ್ಕೆ ಮೊದಲನೇ ಕಂತಾಗಿ 10 ಲಕ್ಷ ರೂ. ಪರಿಹಾರ ನೀಡುವ ಯೋಜನೆ ರೂಪಿಸಲಾಗಿದ್ದು, ಮುಂದೆ ಜನರು ಬೇರೆ ಬೇರೆ ರೀತಿಯಲ್ಲಿ ಸಹಾಯ ಹಸ್ತ ನೀಡಲಿದ್ದಾರೆ ಎಂದು ತಿಳಿಸಿದರು.
ಬಿ.ಸಿ ರೋಡ್ ನಲ್ಲಿ ಮತಾಂಧ ವ್ಯಕ್ತಿಗಳ ಸಂಘಟನೆಗೆ ಅಮಾಯಕ ಯುವಕ ಬಲಿಯಾಗಿದ್ದಾನೆ. ಘಟನೆಯ ಹಿಂದಿರುವ ಶಕ್ತಿಗಳು ಯಾವುದೆಂದು ಬಯಲಾಗಬೇಕು. ಕೃತ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕೈಗೊಳ್ಳಬೇಕು ಎಂದು ಪ್ರಭಾಕರ್ ಭಟ್ ಆಗ್ರಹಿಸಿದರು.
ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ವಿಎಚ್ಪಿ ಮುಖಂಡರಾದ ಜಗದೀಶ್ ಶೇಣವ, ಜಿತೇಂದ್ರ ಕೊಟ್ಟಾರಿ, ಬಜರಂಗದಳದ ಮುಖಂಡ ಶರಣ್ ಪಂಪ್ವೆಲ್ ಮುಂತಾದವರು ಈ ಸಂದರ್ಭದಲ್ಲಿ ಜತೆಗಿದ್ದರು.