ಮಂಗಳೂರು: ಟಿಪ್ಪು ಜಯಂತಿ ಆಚರಣೆ ವಿವಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಮುಂದುವರಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ನವೆಂಬರ್ 15ರ ರಾತ್ರಿ 10 ಗಂಟೆಯವರೆಗೆ ಮುಂದುವರಿಸಲಾಗಿದೆ.
ಜೊತೆಗೆ ಶಾಲಾ-ಕಾಲೇಜುಗಳಿಗೆ ನಾಳೆ ( ನ.14) ಕೂಡ ರಜೆ ನೀಡಿ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅವರು ಆದೇಶ ಹೊರಡಿಸಿದ್ದಾರೆ. ಆದರೆ ಕಳೆದೊಂದು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪುರಭವನದ ಉದ್ಘಾಟನೆ ಸಮಾರಂಭಕ್ಕೆ ಮಾತ್ರ ನಾಳೆ ಅವಕಾಶ ನೀಡಲಾಗಿದ್ದು, ಅದು ಈ ಮೊದಲೇ ನಿರ್ಧರಿಸಿದಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹರೀಶ್ ಹತ್ಯಾ ಆರೋಪಿಗಳ ಪತ್ತೆಗೆ ತಂಡ ರಚನೆ :
ಬಂಟ್ವಾಳ ತಾಲೂಕಿನ ಮಣಿಯಾಲ ಬಳಿಯ ಜಕ್ರಿಬೆಟ್ಟುವಿನಲ್ಲಿ ನಡೆದ ಹರೀಶ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನೆಕ್ಕೆ ವಿಶೇಷ ತಂಡ ರಚಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.
ನನ್ನ ಹೆಸರು ರಮಾನಾಥ ರೈ ಯೇ ಅಲ್ಲ :
ಇದೇ ಸಂದರ್ಭ ಹರೀಶ್ ಪೂಜಾರಿ ಮೇಲೆ ಹಲ್ಲೆ ನಡೆಸಿ ಹರೀಶ್ ಸಾವಿಗೆ ಕಾರಣರಾದವರು ಯಾಮದೇ ಜಾತಿ ಧರ್ಮಕ್ಕೆ ಸೇರಿದ್ದರು ಅವರ ವಿರುದ್ಧ ನಿರ್ಧಾಕ್ಷಿನ್ಯ ಕ್ರಮ ಕೈಗೊಳ್ಳುವಂತೆ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಆರೋಪಿಗಳ ಶೀಘ್ರ ಬಂಧನಕ್ಕೆ ಅದೇಶ ನೀಡಿದ್ದೇನೆ. ಓರ್ವ ಅಮಾಯಕನ ಹತ್ಯೆಗೆ ಕಾರಣರಾದವರೂ ಯಾರೇ ಆಗಲಿ ಅವರನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಪ್ಪಿಸದಿದ್ದರೆ ನನ್ನ ಹೆಸರು ರಮಾನಾಥ ರೈ ಯೇ ಅಲ್ಲ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.